ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಪ್ರಮುಖ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ತಲೆಮರೆಸಿಕೊಂಡಿದ್ದು, ಶೀಘ್ರ ಆತನನ್ನು ಬಂಧಿಸಲಾಗುವುದು ಜೊತೆಗೆ ಆತನ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಆರೋಪಿಯ ಬಗ್ಗೆ ಹಲವಾರು ಮಾಹಿತಿಗಳು ಲಭ್ಯವಾಗುತ್ತಿದೆ. ಮಾಹಿತಿಯ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಪವಿತ್ರಾ ಆಚಾರ್ಯ, ಬೊಂದೇಲ್ ನಿವಾಸಿ ಅನಂತ ಭಟ್ ಎಂಬವರನ್ನು ಬಂಧಿಸಲಾಗಿದೆ. ಆದರೆ, ಪ್ರಮುಖ ಆರೋಪಿ ತಲೆ ಮರೆಸಿಕೊಳ್ಳಲು, ಅನಂತ ಭಟ್ ಎಂಬವರು ತನಿಖೆಯ ದಿಕ್ಕು ತಪ್ಪಿಸಿದ್ದಾರೆ. ಪವಿತ್ರಾ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ನೆಪದಲ್ಲಿ ವಂಚಿಸಿದ್ದಾರೆ.
ಸದ್ಯ ಆರೋಪಿ ರಾಜೇಶ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ 6ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಆತನಿಗೆ ತೀವ್ರ ಶೋಧ ಮುಂದುವರಿಸಿದ್ದಾರೆ ಎಂದರು.
ಆರೋಪಿ ವಕೀಲ ರಾಜೇಶ್ ಭಟ್ ವಾಸ್ತವ್ಯದ ಮನೆ ಬದಲಿಸುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಹಲವಾರು ಕಡೆಗಳಲ್ಲಿ ಬದಲಿಸಿದ್ದಾರೆ. ಆರೋಪಿ ರಾಜೇಶ್ ಭಟ್ ಬೇಲ್’ಗಾಗಿ ಮನವಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಬೇಲ್ ಮನವಿಯನ್ನು ತಿರಸ್ಕರಿಸಿದೆ. ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.