ಉಡುಪಿ: ಕುಂದಾಪುರ ತಾಲೂಕಿನ ಜನ್ನಾಡಿ ಮತ್ತು ಮಣಿಗೇರಿ ಕೊರಗರ ಕಾಲೋನಿಯಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ 14 ಮನೆಗಳ ಗೃಹ ಪೂಜೆ ಕಾರ್ಯಕ್ರಮ ಇಂದು ನಡೆಯಿತು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಮನೆಗಳನ್ನು ಲೋಕಾರ್ಪಣೆಗೊಳಿಸಿದರು.
ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ್ನಾಡಿಯಲ್ಲಿ ಕೊರಗ ಕುಟುಂಬಗಳಿಗಾಗಿ 14 ಮನೆಗಳನ್ನು ಉದ್ಯಮಿ ಡಾ. ಎಚ್.ಎಸ್. ಶೆಟ್ಟಿ ಅವರು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮೂಲಕ ನಿರ್ಮಿಸಿದ್ದಾರೆ.
ಮಾರ್ಚ್ 21ರಂದು ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಉಚಿತ ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ್ದರು.
ಜನ್ನಾಡಿ ಕೊರಗರ ಕಾಲೊನಿಯಲ್ಲಿ 10 ಮನೆ ಹಾಗೂ ಮಣಿಗೇರಿಯಲ್ಲಿ 4 ಮನೆ ಸೇರಿದಂತೆ ಒಟ್ಟು 14 ಮನೆಗಳನ್ನು ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಡಾ. ಹೆಚ್.ಎಸ್. ಶೆಟ್ಟಿ ಉಪಸ್ಥಿತರಿದ್ದರು.


