ವಿಟ್ಲ: ಸಿನಿಮಾ ಶೈಲಿಯಲ್ಲಿ ಇಡಿ ಅಧಿಕಾರಿಗಳು ಎಂದು ನಂಬಿಸಿ ಸಿಂಗಾರಿ ಬೀಡಿ ಮಾಲೀಕರ ಮನೆಯಿಂದ ವಂಚಕರು 30 ಲಕ್ಷ ದೋಚಿದ ಘಟನೆ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಎಂಬಲ್ಲಿ ನಡೆದಿದೆ.
ಸಿಂಗಾರಿ ಬೀಡಿ ಸಂಸ್ಥೆ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಶುಕ್ರವಾರ ರಾತ್ರಿ ಸಿಂಗಾರಿ ಬೀಡಿ ಮಾಲೀಕ ನಾರ್ಶ ನಿವಾಸಿ ಸುಲೈಮಾನ್ ಹಾಜಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ತಂಡವೊಂದು ಆಗಮಿಸಿದೆ. ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ದಿಢೀರ್ ದಾಳಿ ನಡೆಸಿ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದೆ.
ಮೂಲಗಳ ಪ್ರಕಾರ ಶುಕ್ರವಾರ ತಡರಾತ್ರಿ 7 ಜನರ ತಂಡ ಮಾರುತಿ ಎರ್ಟಿಗಾ ಕಾರಿನಲ್ಲಿ ಬಂದು ಸುಲೈಮಾನ್ ಅವರ ಮನೆಯ ಬಾಗಿಲು ತಟ್ಟಿದ್ದಾರೆ. ತಮ್ಮನ್ನು ತಾವು ಇಡಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡ ಈ ಖದೀಮರು, ತಮ್ಮ ಆಸ್ತಿ ಹಾಗೂ ಬ್ಯಾಂಕ್ ವಹಿವಾಟಿನ ಲೆಕ್ಕ ಕೊಡುವಂತೆ ಕೇಳಿದ್ದಾರೆ ಎನ್ನಲಾಗಿದೆ. ಇದಲ್ಲದೇ ತನಿಖೆಗೆ ಸಹಕರಿಸದಿದ್ದರೇ, ಬಂಧಿಸುವುದಾಗಿ ಹೆದರಿಸಿದ್ದಾರೆ. ಸುಮಾರು ಎರಡೂವರೆ ಗಂಟೆಗಳ ಕಾಲ ಈ ತಂಡ ತನಿಖೆಯ ನಾಟಕವಾಡಿದೆ. ಮುಂಜಾನೆ ಸಮಯ ಅವರು ಮನೆಯಿಂದ ಸುಮಾರು 30 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ. ಇವರು ಹಿಂದಿ ಇಂಗ್ಲೀಷ್ ಹಾಗೂ ಕನ್ನಡ ಮಾತನಾಡುತ್ತಿದ್ದರು ಎನ್ನಲಾಗಿದೆ.
ದುಷ್ಕರ್ಮಿಗಳು ಬಂದ ಕಾರು ತಮಿಳುನಾಡು ರಿಜಿಸ್ಟ್ರೇಷನ್ ಹೊಂದಿತ್ತು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ಬಹಿರಂಗವಾಗುತ್ತಲೇ ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು. ಆರೋಪಿಗಳ ಪತ್ತೆಗೆ ಅಲರ್ಟ್ ಆಗಿದ್ದಾರೆ. ಪರಿಸರದ ಎಲ್ಲ ರಸ್ತೆಗಳಲ್ಲಿ ನಾಕಬಂದಿ ನಡೆಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.


