ಬೆಂಗಳೂರು: ರಾಜ್ಯ ಸರ್ಕಾರ ಬಹು ನಿರೀಕ್ಷಿತ ಯೋಜನೆ ಗೃಹ ಲಕ್ಷ್ಮಿ ಯೋಜನೆಗೆ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಕುಟುಂಬದ ಯಜಮಾನಿ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೀಗೆ ಅರ್ಜಿ ಸಲ್ಲಿಸಿದಂತ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಆಗಸ್ಟ್ 16ರಂದು ಗೃಹ ಲಕ್ಷ್ಮಿ ಯೋಜನೆಯಡಿ 2000 ರೂ ನಿಮ್ಮ ಖಾತೆಗೆ ಜಮಾ ಆಗಲಿದೆ.
ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಧಾನಸೌಧದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರು. ಈ ಚಾಲನೆಯ ನಂತ್ರ ಇಂದಿನಿಂದ ಗೃಹ ಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಶುರುವಾದಂತೆ ಆಗಿದೆ.
ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರು ತಮ್ಮ ಆಧಾರ್, ಬ್ಯಾಂಕ್ ಖಾತೆ ವಿವರ, ಪಡಿತರ ಚೀಟಿಗಳೊಂದಿಗೆ ಸೇವಾ ಕೇಂದ್ರಗಳಿಗೆ ತೆರಳಿ ಗೃಹ ಲಕ್ಷ್ಮಿ ಯೋಜನೆಗಾಗಿ ನೋಂದಣಿ ಮಾಡಿಸಬಹುದಾಗಿದೆ.