ಕುಂದಾಪುರ: ದೇವಸ್ಥಾನದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನಡೆಯುತ್ತಿದ್ದ ಸಮಯದಲ್ಲಿ ಏಕಾಏಕಿ ದೇವಳಕ್ಕೆ ನುಗ್ಗಿದ ವ್ಯಕ್ತಿಯೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಯತ್ನಿಸಿದ ಘಟನೆ ಗಂಗೊಳ್ಳಿಯ ಖಾರ್ವಿಕೇರಿ ಸಮೀಪದಲ್ಲಿರುವ ಶ್ರೀಮಹಾಕಾಳಿ ದೇವಳದ ಹಿಂಬದಿಯ ದೇವಸ್ಥಾನವೊಂದರಲ್ಲಿ ನಡೆದಿದೆ. ಈ ವೇಳೆ ಆತನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿವೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಎಂದು ಗುರುತಿಸಲಾಗಿದೆ. ಹಾಗೆಯೇ ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಬೆಂಕಿ ನಂದಿಸಲು ಹೋಗಿ ಗಾಯಗೊಂಡವರು. ಮೂವರನ್ನೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವಸ್ಥಾನದಲ್ಲಿ ಇಂದು, ಈ ವೇಳೆ ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು, ದೀಪದಿಂದ ಬೆಂಕಿ ಹಚ್ಚಿಕೊಂಡ ಎನ್ನಲಾಗಿದೆ. ಕೂಡಲೇ ಅಲ್ಲೇ ಇದ್ದ ಕೆಲವರು ಬೆಂಕಿ ನಂದಿಸಲು ಮುಂದಾದರು. ಈ ಸಂದರ್ಭ ಲಕ್ಷ್ಮಣ ಮತ್ತು ಜನಾರ್ದನ ಎಂಬವರು ಸುಟ್ಟ ಗಾಯಗೊಂಡರೆನ್ನಲಾಗಿದೆ.
ರಾಘವೇಂದ್ರ ಆಚಾರ್ಯ ತೀವ್ರ ಸುಟ್ಟಗಾಯಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಗಂಗೊಳ್ಳಿಯ ಆಪತ್ಭಾಂದವ ಆಂಬುಲೆನ್ಸ್ ನ ಇಬ್ರಾಹಿಂ ಹಾಗೂ ತಂಡ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.