ಬೆಳ್ತಂಗಡಿ : ಅನುಮಾನಾಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಶವ ಮನೆಯ ಕೆರೆಯಲ್ಲಿ ಪತ್ತೆಯಾಗಿದ್ದು. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್- ಭಾರತಿ ದಂಪತಿಗಳ ಎರಡನೇ ಪುತ್ರಿ ವೀಣಾ(19) ಎಂಬಾಕೆಯ ಶವ ಮನೆಯ ಕೆರೆಯಲ್ಲಿ ಜುಲೈ 11 ರಂದು ಮಧ್ಯಾಹ್ನದ ಬಳಿಕ ಪತ್ತೆಯಾಗಿದೆ.

ನಾಗೇಶ-ಭಾರತಿ ದಂಪತಿಯ ನಾಲ್ಕು ಜನ ಮಕ್ಕಳಲ್ಲಿ ವೀಣಾ ಎರಡನೇ ಪುತ್ರಿಯಾಗಿದ್ದು ಅವಳಿಗೆ ಮಾನಸಿಕ ಖಾಯಿಲೆ ಇದ್ದು ಆಕೆಗೆ ಪುತ್ತೂರಿನ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ವೀಣಾಗೆ ಒಂದೂವರೆ ತಿಂಗಳ ಮಗು ಇದ್ದು ಇಕೆಯ ಅನಾರೋಗ್ಯದ ಕಾರಣದಿಂದ ಮಗುವನ್ನು ಸುಬ್ರಹ್ಮಣ್ಯ ಸಂಬಂಧಿಗಳ ಮನೆಯಲ್ಲಿ ಬಿಟ್ಟಿದ್ದೆವು. ಎಂದಿನಂತೆ ಅಲ್ಲಿ ಮನೆಯಲ್ಲಿದ್ದಳು ಮನೆಯಿಂದ ನಾಪತ್ತೆಯಾಗಿದ್ದಳು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲು ನಾಗೇಶ್ ಹೋಗಿದ್ದರು. ಮನೆಯವರು ಅಷ್ಟರಲ್ಲಿ ಹುಡುಕಾಟ ನಡೆಸಿದಾಗ ಕೆರೆಯ ನೀರಿನ ಆಳವಾದ ಭಾಗದಲ್ಲಿ ಪತ್ತೆಯಾಗಿದೆ ಎಂದು ಕರೆ ಮಾಡಿ ತಿಳಿಸಿದ್ದರು. ಬಳಿಕ ರಾತ್ರಿ ಅಗ್ನಿಶಾಮಕ ಮತ್ತು ಶೌರ್ಯ ವಿಪತ್ತು ತಂಡದವರು ಸೇರಿ ಮೃತದೇಹ ಹೊರತೆಗೆದಿದ್ದಾರೆ ಎಂದು ತಂದೆ ನಾಗೇಶ್ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಮಾಹಿತಿ ನೀಡಿದ್ದಾರೆ.

ಮನೆಯ ಕೆರೆಯ ಆಳವಾದ ಭಾಗದಲ್ಲಿ ವೀಣಾ ಮೃತದೇಹ ಇರುವುದು ಮನೆಯವರಿಗೆ ಹೇಗೆ ಗೊತ್ತಾಯಿತು ಮತ್ತು ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಸಂಬಂಧಿಕರಿಗೆ ಹಲವು ಅನುಮಾನಗಳಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಎಫ್ಎಸ್ಎಲ್ ವಿಭಾಗದ ಸೋಕೋ ಸಿಬ್ಬಂದಿ ಅರ್ಪಿತಾ ,ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ಧರ್ಮಸ್ಥಳ ಪೊಲೀಸರು, ಅಗ್ನಿಶಾಮಕ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೀಣಾ ಮೃತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶವಪರೀಕ್ಷೆಗಾಗಿ ಸಾಗಿಸಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.


