ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರುತ್ತಲೇ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು ಶೇ.31ರಿಂದ 35ಕ್ಕೆ ಹೆಚ್ಚಿಸಿ ಆದೇಶಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2018 ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರುಗಳಿಗೆ 1ನೇ ಜನವರಿ 2023ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.31ರಿಂದ ಶೇ.35ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ.
ತುಟ್ಟಿಭತ್ಯೆಯ ಉದ್ದೇಶಕ್ಕಾಗಿ ಮೂಲ ವೇತನ ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗುತ್ತಿದ್ದರೆ, ಆ ಸ್ಥಗಿತ ವೇತನ ಬಡ್ತಿ ಎಂದಿದ್ದಾರೆ.
ಮೂಲ ವೇತನಕ್ಕೆ ಮೇಲೆ ಸೂಚಿಸುರುವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬದ್ಧಗಳನ್ನು ಸೇರಿಸತಕ್ಕದ್ದಲ್ಲ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನೀವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇಚನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜವರಿ 2023ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 31 ರಿಂದ ಶೇಕಡ 35ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.


