ಬೆಂಗಳೂರು: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸರ್ಕಾರವು ಇದರ ಬಗ್ಗೆ ತನಿಖೆ ನಡೆಸಲು ಮುಂದಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಹಿನ್ನೆಲೆ ರಾಯಚೂರಿನಲ್ಲಿ ಇಂದು ಬಂದ್ಗೆ ಕರೆ ಕೊಡಲಾಗಿದೆ. ಈ ಕುರಿತು ಮಾತನಾಡಿದ ಸಿಎಂ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಇದರ ಬಗ್ಗೆ ಸಂಪೂರ್ಣ ವರದಿ ತರಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.
ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಿದ್ದು, ರಾಯಚೂರಿನಲ್ಲಿ ಕಲುಷಿತ ನೀರಿನ ಹಿನ್ನೆಲೆ ಡಿಸಿಗೆ ರಾಯಚೂರಿನ ಎಲ್ಲ ವಾರ್ಡ್ಗಳ ನೀರು ಪರಿಶೀಲಿಸಲು ಸೂಚಿಸಿದ್ದೇನೆ. ಅಧಿಕಾರಿಗಳ ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮೃತರಿಗೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲಾಗುವುದು. ಸಿಎಂ ರಿಲೀಫ್ ಫಂಡ್ ನಿಂದ ಪರಿಹಾರ ನೀಡಲಾಗುತ್ತೆ ಎಂದರು.
ಇನ್ನು ಎರಡನೇ ಅಲೆಯ ಕೋವಿಡ್ ಪರಿಹಾರ ವಿಚಾರವಾಗಿ ಮಾತನಾಡಿದ ಅವರು, ಎರಡನೇ ಅಲೆಯಲ್ಲಿ ಕೋವಿಡ್ನಿಂದ ಮೃತರಾದವರ ಕುಟುಂಬಗಳಿಗೆ ಪರಿಹಾರ ಕೊಡಲಾಗಿದೆ. ವಿಶೇಷ ಪ್ರಕರಣಗಳಲ್ಲಿ ಕೆಲವರಿಗೆ ಪರಿಹಾರ ಬಿಟ್ಟು ಹೋಗಿದ್ದರೆ ಅದನ್ನು ಕೊಡಲು ಕ್ರಮ ತಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.