ಮಂಗಳೂರು: ಪೊಲೀಸರಿಗೆ ಲಾಠಿ, ರಿವಾಲ್ವರ್ ಕೊಟ್ಟಿರುವುದು ಪ್ರದರ್ಶನಕ್ಕೆ ಅಲ್ಲ, ಜೀವರಕ್ಷಣೆಗಾಗಿದೆ . ಕೊರೊನ ಯೋಧರ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರೆ ಅಂತವರ ವಿರುದ್ದ ಗೂಂಡಾ ಕೇಸ್ ಹಾಕುವ ಮೂಲಕ ಜೈಲಿಗಟ್ಟಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಇಂದು ಮಂಗಳೂರು ಪತ್ರಿಕಾ ಭವನದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣಾ ಸಮಾರಂಭದಲ್ಲಿಮಾತನಾಡಿದರು. ಜನರಿಗೆ ಇಂದು ಆಹಾರದ ಸಮಸ್ಯೆ ನೀಗಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಜರಾಯಿ ಇಲಾಖೆಯ ವತಿಯಿಂದ ಪ್ರತೀ ದೇವಸ್ಥಾನ ಗಳಲ್ಲೂ ಆಹಾರ ವಿತರಿಸಲಾಗುತ್ತಿದೆ. ನಿಯಂತ್ರಣಕ್ಕಾಗಿ ಎಲ್ಲರ ಸಹಕಾರ ಅಗತ್ಯ. ಕೊರೊನಾ ತಪಾಸಣೆಗೆ ಹೋದವರ ಮೇಲೆ ಹಲ್ಲೆಗೆ ಯಾರಾದರೂ ಮುಂದಾದಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ರಾಜೇಂದ್ರ ಕುಮಾರ್ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲೂ ಎದುರಾಗುವ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ , ನಮ್ಮಿಂದ ಆದ ಅಗತ್ಯ ನೆರವು ನೀಡಲು ಸಿದ್ಧ ಎಂದರು.
ಶಾಸಕರಾದ ವೇದವ್ಯಾಸ ಕಾಮತ್. ಡಾ.ಭರತ್ ಶೆಟ್ಟಿ ಉಪಸ್ಥಿತರಿದ್ದರು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿದರು. ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್. ವಂದಿಸಿದರು.