ಉಡುಪಿ: ಮುಂದಿನ ದಿನಗಳಲ್ಲಿ ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಸರಕಾರದ 8 ವರ್ಷದ ಸಾಧನೆಗಳ ಕುರಿತು ಮಾತನಾಡಿದರು.
ಈ ವೇಳೆ ಅವರು, ಲವ್ ಜಿಹಾದ್ ಪ್ರಕರಣಗಳು ಇತ್ತೀಚೆಗೆ ಶುರುವಾಗಿದ್ದಲ. ಇದು ಹಿಂದಿನಿಂದಲೂ ಇತ್ತು. ಸರ್ಕಾರ ಈಗಾಗಲೇ ಇವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದು, ತಪ್ಪಿತಸ್ಥರನ್ನು ಹಾಗೆ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದರು. ಪೊಲೀಸರು ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರ ಬಂದರೆ ಲೋಕಾಯುಕ್ತವನ್ನು ಬಲಪಡಿಸುತ್ತವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಆದರೆ ಆ ಕಾರ್ಯ ಇನ್ನೂ ಆಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಾತ್ಮಕವಾಗಿ ಎಸಿಬಿಯನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಿದ್ದೇವೆ. ಲೋಕಾಯುಕ್ತ ಕೂಡ ತನ್ನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಇನ್ನು ಬಿ.ಆರ್.ಶೆಟ್ಟಿ ಆಸ್ಪತ್ರೆ ಉದ್ಯೋಗಿಗಳ ಸಂಬಳ ಸಮಸ್ಯೆಗಳ ಕುರಿತು ನನ್ನ ಗಮನಕ್ಕೆ ಬಂದಿದ್ದು, ಉದ್ಯೋಗಿಗಳ ಸಂಬಳವನ್ನು ಶೀಘ್ರ ಬಿಡುಗಡೆ ಮಾಡಿ ಅವರಿಗೆ ಪಾವತಿ ಮಾಡಲಾಗುವುದು ಎಂದು ಭರವಸೆ ಕೊಟ್ಟರು.