ಮಂಗಳೂರು; ಕೋವಿಡ್ ಸಂದರ್ಭದಲ್ಲಿ ಮಂಗಳೂರಿನಲ್ಲಿ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕರು ಕೋವಿಡ್ ಚ್ಯಾಂಪಿಯನ್ ಗಳಂತೆ ಕಾರ್ಯ ನಿರ್ವಹಿಸಿದ್ದಾರೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.
ಪುರಭವನದಲ್ಲಿ ಬುಧವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಮತ್ತು ಯೆನೆಪೊಯ ಸಮುದಾಯ ಆರೋಗ್ಯ ವಿಭಾಗ, ಯೆನೆಪೊಯ ವೈದ್ಯಕೀಯ ಕಾಲೇಜು ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ನಡೆದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿರುವ ಸ್ವಚ್ಛತಾ ಪೌರ ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ತಪಾಸಣಾ ಕಾರ್ಯ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಅವರು ಇದೇ ವೇಳೆ ತಿಳಿಸಿದರು. ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಮತ್ತು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು.
ಮಾನಪಾ ಮಾಜಿ ಮೇಯರ್ ದಿವಾಕರ್,ಮನಪಾ ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ,ಕೋವಿಡ್ ವಿಭಾಗದ ನೋಡಲ್ ಅಧಿಕಾರಿ ಡಾ.ಅಣ್ಣಯ್ಯ ಕುಲಾಲ್ ,ಯೆನೆಪೋಯ ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಅಭಯ ನೀರ್ಗುಡೆ, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ರಾದ ಡಾ.ಪೂನಂ,ಡಾ.ಶುಭಾಂಕರ್,ಸಾರ್ವಜನಿಕ ಸಂಪರ್ಕ ಪ್ರತಿನಿಧಿ ಭಾಸ್ಕರ ಅರಸ್ , ಮನಪಾ ಆರೋಗ್ಯ ನಿರೀಕ್ಷಕ ಶಿವಲಿಂಗಂ ಮೊದಲಾದವರು ಉಪಸ್ಥಿತರಿದ್ದರು.