ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಆತಂಕ ಉಂಟಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಶಸ್ತ್ರಚಿಕಿತ್ಸಕರು ಮಂಗಳೂರು ವಿಮಾನ ನಿಲ್ದಾಣ ಆರೋಗ್ಯಾಧಿಕಾರಿ ಜೊತೆ ಸಮನ್ವಯ ಸಾಧಿಸಿ ಏರ್ ಪೋರ್ಟ್ ನಲ್ಲಿ ಸ್ಕ್ರೀನಿಂಗ್ ನಡೆಸಬೇಕೆಂದು ಸೂಚಿಸಲಾಗಿದೆ.
ಶಂಕಿತ ಪ್ರಕರಣಗಳು ವರದಿಯಾದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿ ಶಂಕಿತ ಪ್ರಕರಣಗಳು ವರದಿಯಾದಾಗ ಚಿಕಿತ್ಸೆ ನೀಡಲು ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕನಿಷ್ಠ 2 ಬೆಡ್ ಮೀಸಲಿಡಲು ಎಲ್ಲಾ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚನೆ ನೀಡಲಾಗಿದೆ.
ಇದೇ ವೇಳೆ ಐಡಿಎಸ್ಪಿ ಯೋಜನಾ ನಿರ್ದೇಶಕ ಡಾ. ಶ್ರೀನಿವಾಸ ಎನ್. ಅವರನ್ನು ಮಂಕಿಪಾಕ್ಸ್ ಪ್ರಕರಣಗಳನ್ನು ನಿರ್ವಹಿಸಲು ರಾಜ್ಯಮಟ್ಟದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.