ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಹತ್ತು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ಮನೆಯಿಂದ ಹೊರ ಬರಲಾಗದಂತ ಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜು.06 ರಿಂದ 09ರವರೆಗೆ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಆಂಬಳೆ ಹಾಗೂ ಲಕ್ಕಾ ಹೋಬಳಿ ಹೊರತುಪಡಿಸಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಮತ್ತು ಎನ್ ಆರ್ ಪುರ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸುತ್ತಿರುವ ಕಾರಣ, ಇಂದು(ಜು.6) ಈ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಮನೆಯಿಂದ ಹೊರಬರದ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಒಟ್ಟಾರೆ ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿದೆ. ಮಳೆರಾಯನ ಆರ್ಭಟ ಇನ್ನೂ ಕೆಲವು ದಿನ ಇರಲಿರುವುದರಿಂದ ಜನ ಎಚ್ಚರಿಕೆ ವಹಿಸುವಂತೆ ಆಯಾಯ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.