ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ರವಿವಾರವೂ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಜಿಲ್ಲೆಯ ವಿವಿಧೆಡೆ ಗಿಡ-ಮರ, ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ.
ಬಂಗಾಳ ಕೊಲ್ಲಿಯ ಪಶ್ಚಿಮ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜು.15ರವರೆಗೆ ವ್ಯಾಪಕ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅಲ್ಲಲ್ಲಿ ಆಸ್ತಿ-ಪಾಸ್ತಿ ನಷ್ಟವಾದ ಬಗ್ಗೆಯೂ ವರದಿಯಾಗಿದೆ. ಘಟ್ಟದ ತಪ್ಪಲಿನ ಭಾಗದಲ್ಲಿ ದಿನವಿಡೀ ಮಳೆ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ.
ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಬಂಟ್ವಾಳ, ಸುಳ್ಯ, ಮಂಗಳೂರಿನಲ್ಲಿ ಮಳೆಗೆ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಉಡುಪಿ ಜಿಲ್ಲೆಯಲ್ಲೂ ಮಳೆ ಮುಂದುವರೆದಿದ್ದು,ಕಾರ್ಕಳ, ಹೆಬ್ರಿ, ಕಾಪು ಮತ್ತು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಶೃಂಗೇರಿ, ಕೊಪ್ಪ ಮತ್ತು ಎನ್. ಆರ್. ಪುರದಲ್ಲಿ ಮಳೆ ಸುರಿಯುತ್ತಿದೆ.