ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ದಕ್ಷಿಣ ಭಾರತದಲ್ಲಿ ನಿಮ್ನ ಒತ್ತಡ (ಟ್ರಫ್) ಇರುವ ಕಾರಣ ಕರಾವಳಿಯಾದ್ಯಂತ ಮಂಗಳವಾರ ಬಿರುಸಿನಿಂದ ಕೂಡಿದ ಮಳೆಯಾಗಿದ್ದು ಬುಧವಾರವೂ ಮುಂದುವರಿಯುವ ಸಾಧ್ಯತೆ ಇದ್ದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 3.4 ಸೆಂ.ಮೀ. ಮಳೆಯಾಗಿದೆ. ಬೆಳ್ತಂಗಡಿ, ಧರ್ಮಸ್ಥಳ, ಉಜಿರೆ, ಉಪ್ಪಿನಂಗಡಿ, ಪುತ್ತೂರು, ಕಡಬ, ಗುರುವಾಯನಕೆರೆ, ಮೂಡುಬಿದಿರೆ, ಬಂಟ್ವಾಳ, ಪುಂಜಾಲಕಟ್ಟೆ, ಮಡಂತ್ಯಾರು, ಸುರತ್ಕಲ್, ಮುಡಿಪು, ಮಂಗಳೂರು, ವಿಟ್ಲ, ಕನ್ಯಾನ, ಪಂಜ, ಸುಳ್ಯ, ಸುಬ್ರಹ್ಮಣ್ಯ, ಕಲ್ಲುಗುಡ್ಡೆ, ಐನೆಕಿದು, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ತೆಕ್ಕಾರು ಗ್ರಾಮದ ಕೊಡಂಗೆ ನಿವಾಸಿ ರಹ್ಮತ್ ಅವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಕೆಲವು ಕಡೆ ರಸ್ತೆಯಲ್ಲಿ ನೀರು ಹರಿದು ಜಲಾವೃತಗೊಂಡು, ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಉಡುಪಿ ಹಾಗು ಕಾಸರಗೋಡು ಜಿಲ್ಲೆಯಲ್ಲಿಯೂ ಧಾರಾಕಾರ ಮಳೆಯಾಗಿದ್ದು, ಕಾರ್ಕಳ ತಾಲೂಕಿನ ಕಸಬಾದಲ್ಲಿ ಒಂದು ಮನೆಗೆ ಭಾಗಶಃ ಹಾನಿಯಾಗಿದೆ.
ಗ್ರಾಮೀಣ ಭಾಗದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುತ್ತಿದ್ದು, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡ ಜಿಲ್ಲೆಯಲ್ಲಿ ಸನ್ನದ್ಧವಾಗಿದೆ. ತಾಲೂಕು ವ್ಯಾಪ್ತಿಯಲ್ಲಿ ಮಳೆಯಿಂದ ಅನಾಹುತ ಸಂಭವಿಸದಂತೆ ತಹಶೀಲ್ದಾರರು ಎಚ್ಚರದಲ್ಲಿರುವಂತೆ ಸೂಚನೆ ನೀಡಲಾಗಿದೆ
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದ ಅಬ್ಬರ ಕೂಡ ಹೆಚ್ಚಿರುವ ಸಾಧ್ಯತೆ ಇದ್ದು, ಮೀನುಗಾರರಿಗೆ ಜಾಗ್ರತೆ ಸೂಚನೆ ನೀಡಲಾಗಿದೆ.