
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರೆಂಜಾಳ ಗ್ರಾಮದಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ಪರಿಸ್ಥಿತಿ ಗಂಭೀರಗೊಂಡಿದೆ.
ಘಟನೆಯ ಗಂಭೀರತೆಯನ್ನು ಅರಿತ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ತಹಶೀಲ್ದಾರ್ ಪ್ರದೀಪ್ ಆರ್. ಅವರು ರೆಂಜಾಳದ ಅಪಾಯಕಾರಿ ಸ್ಥಳಕ್ಕೆ ಜಂಟಿ ಭೇಟಿ ನೀಡಿ ಪ್ರತ್ಯಕ್ಷ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಂತ್ರಸ್ತ ಕುಟುಂಬಗಳನ್ನು ಸಮೀಪದ ಸರ್ಕಾರಿ ಶಾಲೆಗೆ ಸುರಕ್ಷಿತವಾಗಿ ಸ್ಥಳಾಂತರಿಸಿ, ಅವರಿಗೆ ತಾತ್ಕಾಲಿಕ ವಾಸಸ್ಥಳ ಹಾಗೂ ಅಗತ್ಯ ಸೌಲಭ್ಯಗಳನ್ನು ತಕ್ಷಣವೇ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ಥಳೀಯರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಜಿಲ್ಲಾಧಿಕಾರಿಯವರು, ಪರಿಸ್ಥಿತಿ ಎದುರಿಸಲು ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಭೂಕುಸಿತಕ್ಕೆ ನಿಖರ ಕಾರಣ ಹಾಗೂ ಮುಂದಿನ ಅಪಾಯದ ಸಾಧ್ಯತೆಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಬೆಂಗಳೂರಿನ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣೆ (GSI) ಸಂಸ್ಥೆಯ ವಿಜ್ಞಾನಿಗಳ ತಂಡವು ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ತಿಳಿದು ಬಂದಿದೆ.


