ಮಂಗಳೂರು; ನಾಗುರಿಯಲ್ಲಿ ಆಟೋದಲ್ಲಿ ಸ್ಫೋಟ ನಡೆದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿನ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲು ಗೃಹ ಇಲಾಖೆಯು ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಅದರಂತೆ ರವಿವಾರದಿಂದ ತಪಾಸಣೆ ಪ್ರಕ್ರಿಯೆ ಚುರುಕುಗೊಂಡಿದೆ.
ರಾಜಧಾನಿ ಬೆಂಗಳೂರಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳು ಸೇರಿದಂತೆ ಜನನಿಬಿಡ ಪ್ರದೇಶಗಳು, ಪ್ರಮುಖ ಪ್ರವಾಸಿ ತಾಣಗಳು, ಅಣೆಕಟ್ಟುಗಳು ಪ್ರತಿಷ್ಠಿತ ದೇವಾಲಯಗಳು, ಧಾರ್ಮಿಕ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಂಡು ಕಟ್ಟೆಚ್ಚರ, ಮುನ್ನಚ್ಚರಿಕೆ ಕ್ರಮವಾಗಿ ನಿಗಾ ವಹಿಸಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಎಸ್ಪಿ ಹೃಷಿಕೇಶ್ ಸೋನಾವಣೆ ಮತ್ತು ಅಡಿಷನಲ್ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಬಂದೋಬಸ್ತ್ ಕಾರ್ಯ ಏರ್ಪಡಿಸಲಾಗಿದೆ. ಪುತ್ತೂರು ಮತ್ತು ಕಡಬ ತಾಲೂಕಿನ ಆಯ್ದ ಸ್ಥಳಗಳಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಗುಪ್ತಚರ ಇಲಾಖೆ ಕೂಡ ವಿವಿದೆಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ