ಶಿರ್ವ: ಇದೊಂದು ಅಪರೂಪದ ಕಾರ್ಯಕ್ರಮ.ಇಲ್ಲಿನ ಅಟ್ಟಿಂಜೆ ಶಂಭು ಶೆಟ್ಟಿ ಮತ್ತು ಹೇಮಲತಾ ಶೆಟ್ಟಿಯವರ ವಿವಾಹ ವಾರ್ಷಿಕೋತ್ಸವದ ಸ್ವರ್ಣ ಮಹೋತ್ಸವದ ಸವಿನೆನಪಿಗಾಗಿ ಅವರ ಮಕ್ಕಳು ಊರವರಿಗೆ ಅಪರೂಪದ ಕೊಡುಗೆ ನೀಡಿದ್ದಾರೆ. ಅದು , ಬರೋಬ್ಬರಿ 40 ಲಕ್ಷ ರೂ. ವೆಚ್ಚದ ಹೈಟೆಕ್ ಬಸ್ ನಿಲ್ದಾಣ!
ಹೌದು ,ತಂದೆ ತಾಯಿ ಹೆಸರು ಅಜರಾಮರಗೊಳಿಸಲು ಈ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಿ ಶಿರ್ವ ಗ್ರಾ.ಪಂ. ಗೆ ಕೊಡುಗೆಯಾಗಿ ನೀಡಲಾಯಿತು. ನೂತನ ಬಸ್ ನಿಲ್ದಾಣವನ್ನು ಶಿರ್ವ ಅಟ್ಟಿಂಜೆ ಶಂಭು ಶೆಟ್ಟಿ ಮತ್ತು ಹೇಮಲತಾ ಶೆಟ್ಟಿ ದಂಪತಿ ಉದ್ಘಾಟಿಸಿದರು. ಬಳಿಕ ಶಿರ್ವ ಮಹಿಳಾ ಸೌಧದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಆಗಮ ವಿದ್ವಾಂಸ ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ರೆ|ಫಾ| ಡೆನ್ನಿಸ್ ಡೇಸಾ ಮತ್ತು ಶಿರ್ವ ಸುನ್ನಿ ಜಾಮಿಯಾ ಮಸೀದಿಯ ಖತೀಬರಾದ ಸಿರಾಜುದ್ದೀನ್ ಝೈನಿ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಾಹ ವಾರ್ಷಿಕೋತ್ಸವದ ಸ್ವರ್ಣ ಮಹೋತ್ಸವ ಆಚರಿಸುತ್ತಿರುವ ಅಟ್ಟಿಂಜೆ ಶಂಭು ಶೆಟ್ಟಿ ದಂಪತಿಯನ್ನು ಶಿರ್ವ ಗ್ರಾ.ಪಂ. ವತಿಯಿಂದ ಸಮ್ಮಾನಿಸಿ ಗೌರವಿಸಲಾಯಿತು.
ಮುಖ್ಯ ಅತಿಥಿ ಎಲ್ಲೂರು ಸೀಮೆಯ ಆಗಮ ವಿದ್ವಾಂಸ ಕುತ್ಯಾರು ಕೇಂಜ ಶ್ರೀಧರ ತಂತ್ರಿ ಮಾತನಾಡಿ, ಮನುಷ್ಯನ ಲೌಕಿಕ ಯಾತ್ರೆಯ ತಾಣ ಬಸ್ಸು ತಂಗುದಾಣವಾಗಿದ್ದು, ದೇವರು ಕೊಟ್ಟ ಸಂಪತ್ತನ್ನು ಸಮಾಜಕ್ಕಾಗಿ ವಿನಿಯೋಗಿಸಿದಾಗ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ರೆ|ಫಾ| ಡೆನ್ನಿಸ್ ಡೇಸಾ ಮಾತನಾಡಿ ಬಸ್ ನಿಲ್ದಾಣ ಎಲ್ಲರನ್ನೂ ಒಗ್ಗೂಡಿಸುವ ಸಾಮರಸ್ಯದ ತಾಣವಾಗಿದ್ದು, ಸಮಾಜಕ್ಕೆ ಕೊಡುಗೆ ನೀಡಿದ ಶಂಭು ಶೆಟ್ಟಿ ದಂಪತಿ ಮತ್ತು ಮಕ್ಕಳನ್ನು ಅಭಿನಂದಿಸಿದರು. ಶಿರ್ವ ಸುನ್ನಿ ಜಾಮಿಯಾ ಮಸೀದಿಯ ಖತೀಬರಾದ ಸಿರಾಜುದ್ದೀನ್ ಝೈನಿ ಮಾತನಾಡಿ ಸ್ನೇಹ,ಸೌಹಾರ್ದತೆ ಮತ್ತು ಸಹಬಾಳ್ವೆಯೊಂದಿಗೆ ಜೀವನ ನಡೆಸುವ ಶಿರ್ವದಲ್ಲಿ ಜನಮಾನಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುವ ಕೆಲಸ ಶಂಭು ಶೆಟ್ಟಿ ದಂಪತಿ ಮತ್ತು ಮಕ್ಕಳಿಂದ ನಡೆದಿದೆ ಎಂದು ಹೇಳಿದರು.