ನವದೆಹಲಿ; ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನ ಆದೇಶ ಹೊರ ಬಿದ್ದಿದೆ. ಪ್ರಕರಣಕ್ಕೆ ಸಂಬಂಧಿಸಿಗಂತೆ ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿರುವ ಹಿನ್ನೆಲೆ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.
ಒಬ್ಬ ನ್ಯಾಯಮೂರ್ತಿಯಿಂದ ಹೈಕೋರ್ಟ್ ಆದೇಶ ರದ್ದುಗೊಳಿಸಿ ತೀರ್ಪು ಬಂದರೆ, ಮತ್ತೋರ್ವ ನ್ಯಾಯಮೂರ್ತಿ ಹಿಜಾಬ್ ಧರಿಸೋದು ಅವರರವರ ಆಯ್ಕೆ ಎಂದು ತೀರ್ಪು ನೀಡಿದ್ದಾರೆ. ಹಾಗಾಗಿ ವಿಭಿನ್ನ ತೀರ್ಪು ಹಿನ್ನೆಲೆ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.
ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದಾರೆ. ನ್ಯಾಯಮೂರ್ತಿ ಸುಧಾಂಶ ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದುಗೊಳಿಸಿದ್ದಾರೆ. ಇಬ್ಬರೂ ವಿಭಿನ್ನ ತೀರ್ಪು ನೀಡಿದ ಹಿನ್ನೆಲೆ ಹಿಜಾಬ್ ವಿವಾದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಲಾಗಿದೆ.
ಇನ್ನು ಉಡುಪಿಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್ಗೆ ತರಗತಿಯಲ್ಲಿ ನಿರ್ಬಂಧ ವಿಧಿಸಿದ ಕಾಲೇಜಿನ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಾಲಾ, ಕಾಲೇಜಿನ ತರಗತಿಗಳಿಗೆ ಹಿಜಾಬ್ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿತ್ತು. ಅಲ್ಲದೆ, ಹಿಜಾಬ್ ಧಾರಣೆ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದೂ ವ್ಯಾಖ್ಯಾನಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.