ಸುಬ್ರಮಣ್ಯ; ಇಲ್ಲಿ ನಡೆದ ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲ್ಲೆಗೊಳಗಾದ ಯುವಕ ಹಾಗೂ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಇಬ್ಬರ ಕಡೆಯಿಂದಲೂ ದೂರು -ಪ್ರತಿದೂರು ದಾಖಲಾದ ಬೆನ್ನಲ್ಲೇ ಇದೀಗ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.
ಇಂದು ಬೆಳಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯೆದುರು ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಹಿಂದೂ ಕಾರ್ಯಕರ್ತರನ್ನೇ ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಠಾಣೆ ಎದುರು ಪ್ರತಿಭಟನೆಗೆ ತಯಾರಿ ನಡೆಸಿಕೊಂಡಿದ್ದಾರೆ.
ಈ ಹಿಂದೆ ಸುಬ್ರಹ್ಮಣ್ಯ ಜಾತ್ರೋತ್ಸವ ಸಂದರ್ಭದಲ್ಲಿ ಆದ ಘಟನೆ ಹಾಗೂ ಇದೀಗ ಸುಬ್ರಹ್ಮಣ್ಯದಲ್ಲಿ ಅಪ್ರಾಪ್ತ ಹಿಂದೂ ಹುಡುಗಿಯ ಜತೆಗಿದ್ದ ಮುಸ್ಲಿಂ ಯುವಕನಿಗೆ ಥಳಿಸಿದ ಪ್ರಕರಣದಲ್ಲಿ ಪೊಲೀಸರು ಅಮಾಯಕ ಹಿಂದೂ ಯುವಕರನ್ನೇ ಬಂಧಿಸಿ ಮಾನಸಿಕ ಕಿರಿಕಿರಿ ನಡೆಸಿದ್ದಾರೆ. ಪೊಲೀಸರು ಟಾರ್ಗೆಟ್ ಮಾಡಿ ಹಿಂದೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನಾ ಸಭೆ ನಡೆಯಲಿದೆ ಎನ್ನಲಾಗಿದೆ.
ಪ್ರಕರಣದಲ್ಲಿ ಇಲ್ಲದ ವ್ಯಕ್ತಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಹಿಂದೂ ಯುವಕರನ್ನೇ ಸುಬ್ರಹ್ಮಣ್ಯ ಠಾಣಾ ಪೊಲೀಸರು ಟಾರ್ಗೆಟ್ ಮಾಡುತ್ತಿರುವುದು ಮತ್ತು ಪೊಲೀಸರ ಇಬ್ಬಂದಿತನ ಪ್ರಶ್ನಿಸಿ ಹಿಂಜಾವೇ ಮತ್ತು ಇನ್ನಿತರ ಸಂಘ ಪರಿವಾರದ ಕಾರ್ಯಕರ್ತರು ಪ್ರತಿಭಟನೆಗೆ ತೀರ್ಮಾನಿಸಿದ್ದಾರೆ.