ಮಂಗಳೂರು: ಶುಕ್ರವಾರ ಹಿಬಾಜ್ ವಿಚಾರಕ್ಕೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರ ಮಧ್ಯೆ ಗಲಾಟೆ ನಡೆದ ಬೆನ್ನಲ್ಲೇ ಮಂಗಳೂರಿನ ರಥಬೀದಿಯಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಯ ನಿರ್ದೇಶನದಂತೆ ಸದ್ಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸದ್ಯ ಆನ್ಲೈನ್ ತರಗತಿಯನ್ನು ನಡೆಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಮೆಸೇಜ್ ಕಳುಹಿಸಲಾಗಿದೆ. ರಥಬೀದಿ ಕಾಲೇಜಿನಲ್ಲಿ ಗುರುವಾರ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿಲ್ಲ ಎಂದು ವಿದ್ಯಾರ್ಥಿನಿಯರು ದೂರಿದ್ದರು. ಶುಕ್ರವಾರವೂ ಇದು ಮುಂದುವರಿದಿದ್ದು, ಐವರು ಹಿಜಾಬ್ ಧಾರಿ ವಿದ್ಯಾರ್ಥಿನಿಯರನ್ನು ಕಾಲೇಜಿನ ಗೇಟ್ ಬಳಿ ಕೆಲವು ಉಪನ್ಯಾಸಕರು, ಹಾಗು ಕಾಲೇಜಿಗೆ ಸಂಬಂಧಿಸಿದ ಕೆಲವರು ತಡೆದಿದ್ದರು. ಈ ವೇಳೆ ಕೆಲವು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರ ಪ್ರವೇಶಕ್ಕೆ ಕಾಲೇಜು ಪ್ರವೇಶ ದ್ವಾರದಲ್ಲಿ ಅಡ್ಡಿಪಡಿಸಿದ್ದಲ್ಲದೆ, ಮಾತಿನ ಚಕಮಕಿ ನಡೆಸಿದ್ದರು. ಈ ಬಗ್ಗೆ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಬಂದರು ಪೊಲೀಸ್ ಠಾಣೆಗೆ ದೂರು ಕೂಡಾ ನೀಡಿದ್ದಳು.
ಇದರ ಬೆನ್ನಲ್ಲೇ ಇಂದಿನಿಂದ ಕಾಲೇಜಿಗೆ ಅನಿರ್ದಿಷ್ಟಾವಧಿಗೆ ರಜೆ ಘೋಷಿಸಿ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದೆ.


