ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಬಂದಿದ್ದೇನೆ. ಕೋವಿಡ್ ಕಾಲದಲ್ಲಿ ಅವರು, ನಿಭಾಯಿಸಿದ ಕಾರ್ಯವೈಖರಿ ಮೆಚ್ಚುಗೆಯಾಗಿ ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ಇತ್ತೀಚಿಗಷ್ಟೇ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಬಿಜೆಪಿ ಸೇರ್ಪಡೆಯ ನಂತರ ಇದೇ ಮೊದಲ ಬಾರಿಗೆ ಪಕ್ಷದ ಪಡಸಾಲೆಯೊಳಗೆ ಪ್ರಮೋದ್ ಕಾಣಿಸಿಕೊಂಡರು. ಉಡುಪಿಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ನಂತರ ಮಾಧ್ಯಮಗಳ ಜೊತೆ ಪ್ರಮೋದ್ ಮಧ್ವರಾಜ್ ಮಾತನಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮೇಲೆ ವಿಶ್ವಾಸ ಇಟ್ಟು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿ.ಎಲ್ ಸಂತೋಷ್ ಅವರ ಮೇಲೆ ವಿಶ್ವಾಸವಿಟ್ಟು ನಾನು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಅಂತಲೂ ಹೇಳಿದರು. ನಾನಾಗಿ ಬಿಜೆಪಿಯ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ. ಭಾರತೀಯ ಜನತಾ ಪಕ್ಷ ಯಾವುದೇ ಭರವಸೆಗಳನ್ನು ಕೊಟ್ಟಿಲ್ಲ. ಒಬ್ಬ ಕಾರ್ಯಕರ್ತನಾಗಿ ನಾನು ಬಿಜೆಪಿಯಲ್ಲಿ ದುಡಿಯುತ್ತೇನೆ. 2023 ಚುನಾವಣೆಯಲ್ಲಿ 150 ಸೀಟು ಗೆಲ್ಲಿಸಿಕೊಳ್ಳಲು ನಾನು ನನ್ನ ಅಳಿಲು ಸೇವೆಯನ್ನು ಮಾಡುತ್ತೇನೆ. ಕರ್ನಾಟಕ ರಾಜ್ಯದಲ್ಲಿ ಪಕ್ಷ ಎಲ್ಲಿ ಕೆಲಸ ಮಾಡಲು ಹೇಳುತ್ತದೆ ಅಲ್ಲಿ ಹೋಗಿ ಕೆಲಸ ಮಾಡುತ್ತೇನೆ. ವಿಶೇಷವಾಗಿ ಮೀನುಗಾರರು ಇರುವಂತಹ ಕ್ಷೇತ್ರದಲ್ಲಿ ಹೋಗಿ ಕೆಲಸ ಮಾಡುತ್ತೇನೆ. ಪಕ್ಷ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಅಳಿಲ ಸೇವೆ ಮಾಡಲು ಬದ್ಧನಾಗಿದ್ದೇನೆ ಎಂದರು.