ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಜ್ಯ ಸರಕಾರ ತಾರತಮ್ಯ ಎಸಗಿದೆ. ಹಾಗಾಗಿ ಸೆ.2ರಂದು ಮಂಗಳೂರಿಗೆ ಬರಲಿರುವ ಪ್ರಧಾನಿಗೆ ರಾಜ್ಯ ಸರಕಾರದ ತಾರತಮ್ಯ ನೀತಿಯ ಬಗ್ಗೆ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆಯ ಕಾನೂನು ಸಲಹೆಗಾರ ಉಮರ್ ಫಾರೂಕ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರವು ಜಾತಿ ಮತ್ತು ರಾಜಕೀಯ ತಾರತಮ್ಯ ಮಾಡಿದೆ. ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸರಕಾರ ಪರಿಹಾರ ನೀಡಿದೆ. ಆದರೆ ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ ಸರಕಾರ ಪರಿಹಾರದ ಮೊತ್ತ ನೀಡಿಲ್ಲ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಆದರೆ ಅವರು ಆಶ್ವಾಸನೆ ಈಡೇರಿಸಿಲ್ಲ. ಅಲ್ಲದೆ ಸಚಿವರು, ಶಾಸಕರು ಕೂಡ ಭೇಟಿ ನೀಡಿ ಸಾಂತ್ವನ ಹೇಳಲಿಲ್ಲ.
ಪ್ರವೀಣ್ ಹತ್ಯೆಗೆ ಸಂಬಂಧಿಸಿ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದರೆ ಮಸೂದ್ ಮತ್ತು ಫಾಝಿಲ್ ಪ್ರಕರಣಕ್ಕೆ ಸಂಬಂಧಿಸಿ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿಲ್ಲ, ಎನ್ಐಎಗೂ ತನಿಖೆಯನ್ನು ಹಸ್ತಾಂತರಿಸಿಲ್ಲ. ಸರಕಾರದ ಈ ತಾರತಮ್ಯವನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಳ್ಳಲು ಮುಸ್ಲಿಂ ಐಕ್ಯತಾ ವೇದಿಕೆ ಬಯಸಿದೆ. ಹಾಗಾಗಿ ಜಿಲ್ಲಾಡಳಿತ ಅದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಉಮರ್ ಫಾರೂಕ್ ಒತ್ತಾಯಿಸಿದ್ದಾರೆ.