ಮಣಿಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದ ಮೊಟ್ಟಮೊದಲ ಸ್ಕಿನ್ ಬ್ಯಾಂಕ್ ಅನ್ನು ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ ಅಧ್ಯಕ್ಷರಾದ ಡಾ.ರಂಜನ್ ಆರ್ ಪೈ ಶನಿವಾರ ಉದ್ಘಾಟಿಸಿದರು
ರೋಟರಿ ಕ್ಲಬ್ ಮಣಿಪಾಲ ಟೌನ್ ಮತ್ತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಪಾಲುದಾರಿಕೆಯಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರೋಟರಿ ಮಾಹೆ ಸ್ಕಿನ್ ಬ್ಯಾಂಕ್ ಅನ್ನು ಸ್ಥಾಪಿಸಲಾಗಿದೆ. ರೋಟರಿ ಕ್ಲಬ್ ಮಣಿಪಾಲ್ ಟೌನ್ ಉಪಕರಣಗಳನ್ನು ಖರೀದಿಸಲು ರೋಟರಿ ಫೌಂಡೇಶನ್ನ ಜಾಗತಿಕ ಅನುದಾನ ಕಾರ್ಯಕ್ರಮದಡಿ 83 ಲಕ್ಷ ರೂಪಾಯಿಗಳನ್ನು ನೀಡಿದ್ದು, ಅವಶ್ಯಕ ಮೂಲಸೌಕರ್ಯಗಳಿಗೆ ಮಾಹೆ 50 ಲಕ್ಷ ರೂಪಾಯಿಗಳನ್ನು ಕೊಡುಗೆಯಾಗಿ ನೀಡಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ರಂಜನ್ ಪೈ, ಸ್ಕಿನ್ ಬ್ಯಾಂಕ್ನಿಂದ ಸುಟ್ಟ ಗಾಯಗಳಿಂದ ನರಳುವವರ ಚಿಕಿತ್ಸೆಗೆ ಅನುಕೂಲವಾಗಲಿದೆ. ಸ್ಕಿನ್ ಬ್ಯಾಂಕ್ನಲ್ಲಿ ಸ್ಕಿನ್ ಗ್ರಾಫ್ಟಿಂಗ್ ಮೂಲಕ ರೋಗಿಗಳಿಗೆ ಉತ್ತಮ ಆರೈಕೆ ಸಿಗಲಿದೆ. ರೋಗಿಗಳ ಆತ್ಮವಿಶ್ವಾಸ ಹೆಚ್ಚಾಗಲಿದೆ ಎಂದರು
ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಡಾ.ಎನ್.ಸಿ. ಶ್ರೀಕುಮಾರ್ ಮಾತನಾಡಿ, ಸ್ಕಿನ್ ಬ್ಯಾಂಕ್ನ ಅಗತ್ಯತೆ ಮತ್ತು ಉಪಯುಕ್ತತೆ ವಿವರಿಸಿ, ದೊಡ್ಡ ಸುಟ್ಟ ಗಾಯಗಳಾದ ಸಂದರ್ಭದಲ್ಲಿ ಅಂದರೆ, ಶೇ 30ರಿಂದ40 ಕ್ಕಿಂತ ಹೆಚ್ಚು ಸುಟ್ಟ ಗಾಯವಾದರೆ ರೋಗಿಗಳ ಚರ್ಮ ಬಳಸಲು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಸ್ಕಿನ್ ಬ್ಯಾಂಕ್ ನೆರವಾಗಲಿದೆ ಎಂದರು.
ಕಸ್ತೂರ್ಬಾ ಆಸ್ಪತ್ರೆಯಲ್ಲಿ ಈಗ ಸ್ಕಿನ್ ಬ್ಯಾಂಕ್ ಆರಂಭವಾಗುತ್ತಿರುವುದರಿಂದ, ಸುಟ್ಟ ಗಾಯದ ರೋಗಿಗಳು ಭಾರತದ ಇತರ ಭಾಗಗಳಿಂದ ಚರ್ಮವನ್ನು ಪಡೆಯಲು ನಿರ್ಣಾಯಕ ಅವಧಿಯ 2-3 ದಿನಗಳವರೆಗೆ ಕಾಯಬೇಕಾಗಿಲ್ಲ. ಚರ್ಮದ ಲಭ್ಯತೆಯೂ ಒಂದು ಸಮಸ್ಯೆಯಾಗಿದೆ. ನಮ್ಮದೇ ಚರ್ಮವನ್ನು ನಾವು ಮರಳಿ ಪಡೆಯುವ ಮೂಲಕ, ನಾವು ಬೇಗನೆ ಚಿಕಿತ್ಸೆಯನ್ನು ಪ್ರಾರಂಭಿಸಬಹುದು ಮತ್ತು ನೋವನ್ನು ಕಡಿಮೆ ಮಾಡಬಹುದು ಜೊತೆಗೆ ಜೀವವನ್ನು ಉಳಿಸಬಹುದು ಎಂದು ಹೇಳಿದರು.
ಡಾ.ಎಂ.ಡಿ ವೆಂಕಟೇಶ್ ಮಾತನಾಡಿ, ಸುಟ್ಟಗಾಯದ ರೋಗಿಗಳಿಗೆ ಚರ್ಮವನ್ನು ಲಭ್ಯವಾಗಿಸುವ ಜವಾಬ್ದಾರಿ ಆಸ್ಪತ್ರೆಯ ಮೇಲಿದ್ದು, ಚರ್ಮ ದಾನ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ಡಾ.ಎಚ್.ಎಸ್ ಬಲ್ಲಾಳ್ ಮಾತನಾಡಿ, ಪ್ಲಾಸ್ಟಿಕ್ ಸರ್ಜರಿ ವಿಭಾಗದಲ್ಲಿ 18 ಹಾಸಿಗೆಗಳ ಪೂರ್ಣ ಪ್ರಮಾಣದ ಬರ್ನ್ಸ್ ಘಟಕ ಇದೆ. ಇದಕ್ಕೆ ಪೂರಕವಾಗಿ ಅಗತ್ಯವಿದ್ದ ಸ್ಕಿನ್ ಬ್ಯಾಂಕ್ ನಿರ್ಮಾಣದಿಂದ ಸುಟ್ಟಗಾಯ ರೋಗಿಗಳಿಗೆ, ಚರ್ಮದ ಕಸಿ ಅಗತ್ಯವಿರುವವರಿಗೆ ಅನುಕೂಲವಾಗಲಿದೆ. ಅಂಗ ಮತ್ತು ಅಂಗಾಂಗ ದಾನಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.
ಎಂ.ಜಿ. ರಾಮಚಂದ್ರ ಮೂರ್ತಿ, ಸದಾನಂದ ಚಾತ್ರ, ರಾಜಾರಾಮ್ ಭಟ್ ಮತ್ತು ಗಣೇಶ್ ನಾಯಕ್ ಸ್ಕಿನ್ ಬ್ಯಾಂಕ್ ಉಪಕರಣಗಳನ್ನು ಮಾಹೆಗೆ ಹಸ್ತಾಂತರಿಸಿದರು. ಮಾಹೆ ಪರವಾಗಿ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಉಪ ಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ. ವೆಂಕಟೇಶ್ ಮತ್ತು ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಸಿ.ಜಿ. ಮುತ್ತಣ್ಣ ಸ್ವೀಕರಿಸಿದರು .