ಬೆಂಗಳೂರು: ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರು ಬಂಟರ ಸಂಘದಿಂದ ಆಯೋಜಿಸಿದ್ದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆಯ ಕಾರ್ಯಕ್ರಮದದಲ್ಲಿ ದಿ. ಡಾ. ಜೀವರಾಜ್ ಆಳ್ವ ಸದ್ಭಾವನಾ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಮಾನಾಥ ರೈ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಅವರಲ್ಲಿ ಈ ಮನವಿ ಮಾಡಿದ್ದಾರೆ.
ಬಂಟ ಸಮುದಾಯದಲ್ಲೂ ಸಾಕಷ್ಟು ಮಂದಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿವರಿದ್ದಾರೆ. ಅವರಿಗೆ ಸೂಕ್ತ ನ್ಯಾಯ ಸಿಗಬೇಕು. ಆದ್ರಿಂದ ಬಂಟ ಸಮುದಾಯವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಬೆಂಗಳೂರು ಬಂಟರ ಸಂಘದ ಮೂಲಕ ಕೇಂದ್ರ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಬಂಟ ಸಮಾಜ 3-ಬಿ ಪ್ರವರ್ಗದಲ್ಲಿದೆ. ಆದ್ರೆ ಕೇಂದ್ರದಲ್ಲಿ ಸಾಮಾನ್ಯ ವರ್ಗದಲ್ಲಿದೆ. ಹೀಗಾಗಿ ಬಂಟ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು. ಸರ್ಕಾರದ ಸೌಲಭ್ಯಗಳು ಬಂಟ ಸಮುದಾಯಕ್ಕೂ ಸಿಗಬೇಕು ಎಂಬುದು ಈ ಬೇಡಿಕೆಯ ಉದ್ದೇಶವಾಗಿದೆ ಎಂದು ರಮಾನಾಥ ರೈ ಹೇಳಿದ್ದಾರೆ.
ರಮಾನಾಥ ರೈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣ ಸ್ವಾಮಿ, ಬೆಂಗಳೂರು ಬಂಟರ ಸಂಘದ ಬೇಡಿಕೆಯನ್ನು ಸೂಕ್ತ ರೀತಿಯಲ್ಲಿ ಈಡೇರಿಸುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಅಲ್ಲದೇ ಕೇಂದ್ರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಆಯುಕ್ತರು ಮತ್ತು ಸಚಿವರ ಜೊತೆ ಭೇಟಿ ಮಾಡಿ ಚರ್ಚೆ ಮಾಡೋಣ, ನಿಮ್ಮ ಜೊತೆ ನಾನು ಇರುತ್ತೇನೆ, ಬಂಟ ಸಮುದಾಯದ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕೇಂದ್ರ ಸಚಿವ ನಾರಾಯಣ ಸ್ವಾಮಿ ಸಮಾರಂಭದಲ್ಲಿ ಹೇಳಿದ್ದಾರೆ.