ವಿಜಯಪುರ: ಭ್ರಷ್ಟಾಚಾರದ ವಿಷಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆಲಮಟ್ಟಿಯ ಕೃಷ್ಣಾ ಹಿನ್ನೀರಿನಲ್ಲಿ ಗಂಗಾ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮಾತನಾಡಿದರು. ಸರ್ವ ಜನಾಂಗದ ಶಾಂತಿಯ ತೋಟ ಹಾಳಾಗುತ್ತಿರುವಾಗ ಸುಮ್ಮನಿದ್ದ ಕಾಂಗ್ರೆಸ್, ಇದೀಗ ರಾಜ್ಯದ 9 ಕಡೆ ಪ್ರತಿಭಟನೆಗಿಳಿದಿದೆ. ಈವರೆಗೂ ಸುಮ್ಮನಿದ್ದ ಕಾಂಗ್ರೆಸ್, ಇದೀಗ ಸಂತೋಷ್ ವಿಷಯದಲ್ಲಿ ಪ್ರತಿಭಟನೆಗಿಳಿದಿರುವುದು ಹಾಸ್ಯಾಸ್ಪದವಾಗಿದೆ. ಇದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿಸಿದಂತಾಗಿದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಕಾಂಗ್ರೆಸ್ನ ಐದು ವರ್ಷದ ಆಡಳಿತಾವಧಿಯಲ್ಲಿ ಎಷ್ಟೆಲ್ಲಾ ಭ್ರಷ್ಟಾಚಾರ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತು ಎಂದ ಹೆಚ್ ಡಿಕೆ, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಏಕೆ ಬಂಧಿಸಬೇಕು? ಇದೇ ಸಿದ್ದರಾಮಯ್ಯ ಸರ್ಕಾರದಲ್ಲಿ ಕುರುಬ ಸಮಾಜದ ಕಲ್ಲಪ್ಪ ಹಂಡಿಬಾಗ ಭ್ರಷ್ಟಾಚಾರಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಾಗ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರಾ? ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಈಶ್ವರಪ್ಪ ರಾಜೀನಾಮೆ ಕೊಡಬೇಕೆಂದು ಹೇಳಿದ್ದೇ ನಾನು. ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದಿರುವೆ. ಇದರಲ್ಲಿ ಯಾರ ಪಾತ್ರವಿದೆ ಎಂಬುದು ಜನರ ಮುಂದೆ ಇಡುವುದು ಸರ್ಕಾರದ ಪಾತ್ರವಾಗಿದೆ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿದರು