Saturday, June 6, 2026
Homeಕರಾವಳಿದಾರಿ ತಪ್ಪಿದ್ದು ಕುಮಾರಸ್ವಾಮಿಯೇ ಹೊರತು ಮಹಿಳೆಯರಲ್ಲ; ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾಲೆಟ್...

ದಾರಿ ತಪ್ಪಿದ್ದು ಕುಮಾರಸ್ವಾಮಿಯೇ ಹೊರತು ಮಹಿಳೆಯರಲ್ಲ; ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾಲೆಟ್ ಪಿಂಟೊ ಆಕ್ರೋಶ

- Advertisement -
- Advertisement -

ಮಂಗಳೂರು: ‘ಗ್ಯಾರಂಟಿ ಯೋಜನೆಗಳಿಂದ ಹೆಣ್ಮಕ್ಕಳು ಸ್ವಲ್ಪ ದಾರಿ ತಪ್ಪಿದ್ದಾರೆ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ  ಹೇಳಿಕೆ ನೀಡಿದ್ದಾರೆ. ಯಾವ ಮಹಿಳೆ ದಾರಿ ತಪ್ಪಿದ್ದಾರೆ ಎಂಬುದನ್ನು ಅವರು ಸ್ಪಷ್ಟಪಡಿಸದಿದ್ದರೆ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾಲೆಟ್ ಪಿಂಟೊ ಹೇಳಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕುಮಾರಸ್ವಾಮಿ ಅವರ ಹೇಳಿಕೆ  ಮಹಿಳಾ ಸಮುದಾಯಕ್ಕೆ ಮಾಡಿದ ಅಪಮಾನ. ಈ ಹೇಳಿಕೆಯನ್ನು ಖಂಡಿಸುತ್ತೇವೆ. ಈ ಬಗ್ಗೆ ಬಹಿರಂಗವಾಗಿ ಕ್ಷಮೆ ಯಾಚಿಸದಿದ್ದರೆ ಅವರು ಪ್ರಚಾರಕ್ಕೆ ಹೋದಲ್ಲೆಲ್ಲ ಮಹಿಳೆಯರು ಪ್ರತಿಭಟಿಸಲಿದ್ದಾರೆ’ ಎಂದರು. 

‘ಮಹಿಳೆಯರು ಎಷ್ಟು ಕಷ್ಟದಿಂದ ಕುಟುಂಬವನ್ನು ಸಂಭಾಳಿಸುತ್ತಾರೆ ಎಂದು ರೇಂಜ್‌ ರೋವರ್‌ ಕಾರಿನಲ್ಲಿ ತಿರುಗುವ, ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಉಳಿದುಕೊಳ್ಳುವ ಕುಮಾರಸ್ವಾಮಿ ಅವರಿಗೇನು ಗೊತ್ತು. ದಾರಿ ತಪ್ಪಿರುವುದು ಎರಡೆರಡು ಕಡೆ ಮನೆ ಮಾಡಿರುವ ಕುಮಾರಸ್ವಾಮಿ ಅವರೇ ಹೊರತು, ಮಹಿಳೆಯರಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಲು ಸಾಧ್ಯವಾಗದ್ದನ್ನು ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮಾಡಿ ತೊರಿಸಿದೆ ಎಂಬ ಹೊಟ್ಟೆಕಿಚ್ಚು ಅವರಿಗೆ’ ಎಂದು ತಿಳಿಸಿದರು.    

‘ಗೃಹಲಕ್ಷ್ಮಿ ಯೋಜನೆಯ ಹಣ ಸದುಪಯೋಗವಾಗಿದೆ. ಚುನಾವಣಾ ಪ್ರಚಾರಕ್ಕೆ ಹೋದಾಗ ಅನೇಕ ಮಹಿಳೆಯರು ಈ ಯೋಜನೆ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಇದರಿಂದ ಬಂದ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ನೀರು ತುಂಬಿಸಲು ಸಿಂಟೆಕ್ಸ್‌ ಖರೀದಿಸಿದ್ದಾರೆ. ಇನ್ನೊಬ್ಬ ಮಹಿಳೆಯು ಮಗಳಿಗೆ ಬೆಂಡೋಲೆ ಮಾಡಿಸಿದ್ದಾರೆ. ಮತ್ತೊಬ್ಬರು ಮನೆಗೆ ಫ್ರಿಜ್‌ ಖರೀದಿಸಿದ್ದಾರೆ. ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಈ ಸಲ ಖಂಡಿತಾ ಕಾಂಗ್ರೆಸ್‌ಗೆ ಮತ ನೀಡಲಿದ್ದಾರೆ,” ಎಂದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಕಲಾ ಡಿ.ರಾವ್‌, ಸುರೇಖಾ ಚಂದ್ರಹಾಸ್‌, ಸದಸ್ಯೆ ಗೀತಾ ಅತ್ತಾವರ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸಾರಿಕಾ ಪೂಜಾರಿ, ಪಾಲಿಕೆ ಸದಸ್ಯೆ ತನ್ವೀರ್‌ ಷಾ, ಕಾಂಗ್ರೆಸ್‌ ನಗರ ಬ್ಲಾಕ್‌ ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಚೇತನ್‌ ಭಾಗವಹಿಸಿದ್ದರು.

- Advertisement -

Latest News

error: Content is protected !!