ಕಡಬ: ಜೈ ಶ್ರೀರಾಮ್ ಘೋಷಣೆಯನ್ನು ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿಯ ಆವರಣದೊಳಗೆ ಪ್ರವೇಶಿಸಿ ಕೂಗಿದ ಆರೋಪಿಗಳ ಪ್ರಕರಣವನ್ನು ರದ್ದು ಪಡಿಸುವಂತೆ ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಸಂಬಂಧ, ಪುತ್ತೂರು 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣವನ್ನು ರದ್ದುಪಡಿಸುವಂತೆ ಬಿಳಿನೆಲೆ ಗ್ರಾಮದ ಯುವಕರಾದ ಕೀರ್ತನ್ ಕುಮಾರ್ ಹಾಗೂ ಎನ್.ಎಂ.ಸಚಿನ್ ಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿದ ಅರ್ಜಿಯ ಅನ್ವಯ ಹೈಕೋರ್ಟ್ ಈ ಪ್ರಕರಣವನ್ನು ರದ್ದುಪಡಿಸಿದೆ.
ಪ್ರಕರಣದ ವಿವರ: ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಯ ಆವರಣದಲ್ಲಿ 2023ರ ಸೆ. 24ರಂದು ರಾತ್ರಿಯ ವೇಳೆ ಅಪರಿಚಿತ ಯುವಕರು, ಅಕ್ರಮವಾಗಿ ಮಸೀದಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಹಾಗೆಯೇ “ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ” ಎಂದು ಬೊಬ್ಬೆ ಹಾಕಿದ್ದರು ಎನ್ನಲಾಗಿದೆ. ಈ ಕುರಿತಂರತೆ ಸಿ.ಎಂ.ಹೈದರ್ ಅಲಿ ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಆರೋಪಿಗಳಿಬ್ಬರ ವಿರುದ್ಧ ಸೆಕ್ಷನ್ ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ, ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು, ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ, ಸಾಮಾನ್ಯ ಉದ್ದೇಶ ಮತ್ತು 295-ಎ ಸೇರಿದಂತೆ ವಿವಿಧ ಐಪಿಸಿ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ನು ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, “ಅಪರಿಚಿತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ ಎಂಬ ವಾದ ಅರ್ಥವಾಗುತ್ತಿಲ್ಲ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 295-ಎ ಅಡಿ ಪ್ರಕರಣ ದಾಖಲಿಸಲಾಗಿದೆ. ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವೇ ದುರುದ್ದೇಶಪೂರ್ವಕವಾಗಿ ಕೆರಳಿಸುವ ಕೃತ್ಯವನ್ನು ಐಪಿಸಿ ಸೆಕ್ಷನ್ 295-ಎ ಹೇಳುತ್ತದೆ. ಆದರೆ, ಯಾರಾದರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಅದು ಬೇರೆ ವರ್ಗದ ಧಾರ್ಮಿಕ ಭಾವನೆಗಳಿಗೆ ಹೇಗೆ ಧಕ್ಕೆಯಾಗುತ್ತದೆ,” ಎಂದು ಪೀಠ ಹೇಳಿದೆ.
“ಖುದ್ದು ದೂರುದಾರರೇ ಹಿಂದೂ-ಮುಸ್ಲಿಮರು ಕಡಬ ಪ್ರದೇಶದಲ್ಲಿ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಂತಹ ಘಟನೆ ಆ ಪ್ರದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ತರುತ್ತದೆ ಎಂದು ಕಲ್ಪಿಸಿಕೊಳ್ಳುವುದಕ್ಕೆ ಯಾವುದೇ ಅವಕಾಶವಿಲ್ಲ. ಇನ್ನು ಘೋಷಣೆ ಕೂಗಿದಂತಹ ಆರೋಪಿಗಳ ವಿರುದ್ಧ ಕಿಡಿಗೇಡಿತನ, ಸಮಾಜದಲ್ಲಿ ಬಿರುಕು ಮೂಡಿಸುವುದು, ಅತಿಕ್ರಮ ಪ್ರವೇಶ ಹಾಗೂ ಬೆದರಿಕೆ ಆರೋಪಗಳನ್ನು ಮಾಡಲಾಗಿದೆ. ಆದರೆ, ದೂರು, ವಕೀಲರ ವಾದ ಮತ್ತು ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದಾಗ ಅಂತಹ ಆರೋಪಗಳಿಗೆ ಯಾವುದೇ ಪುರಾವೆಗಳು ಕಾಣುತ್ತಿಲ್ಲ. ಈ ನಿಟ್ಟಿನಲ್ಲಿ ಆರೋಪಿಗಳ ವಿರುದ್ಧದ ಪ್ರಕರಣ ಮುಂದುವರೆಸುವುದು ಕಾನೂನಿನ ದುರ್ಬಳಕೆ ಆಗಲಿದೆ” ಎಂದಿರುವ ನ್ಯಾಯಾಲಯ, ಇಬ್ಬರು ಯುವಕರ ಅರ್ಜಿಯನ್ನು ಮಾನ್ಯ ಮಾಡಿ, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.