ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲ್ಲುವ ಬಗ್ಗೆ ಯಾವ ಸಂಶಯವೂ ಬೇಡ ಎಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಇಂದು ಮಾತನಾಡಿದ ಜನಾರ್ದನ ಪೂಜಾರಿ, ಪದ್ಮರಾಜ ಗೆಲ್ಲುತ್ತಾನೆ, ಗೆಲ್ಲುವುದು ಗ್ಯಾರಂಟಿ ಎಂದು ಹೇಳಿದ್ದಾರೆ.
ಅವನು ಅಹಂಕಾರಿ ಅಲ್ಲ, ಮುಂದೆ ಎಲ್ಲವೂ ದೇವರ ಕೈಯಲ್ಲಿ ಇದೆ, ದೇವರು ನಮ್ಮ ಹಿಂದೆಯೇ ಇದ್ದಾನೆ ಎಂದು ಹೇಳಿರುವ ಜನಾರ್ದನ ಪೂಜಾರಿ, ಖಂಡಿತವಾಗಿಯೂ ಪದ್ಮರಾಜ್ ಗೆಲ್ಲುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇದೇ ವೇಳೆ ಮಂಗಳೂರಿನ ಲಾಲ್ ಭಾಗ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಾರ್ಯಾಲಯವನ್ನು ಜನಾರ್ದನ ಪೂಜಾರಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಎಂಎಲ್ಸಿ ಐವಾನ್ ಡಿಸೋಜಾ ಮತ್ತು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಉಪಸ್ಥಿತರಿದ್ದರು.