ಬೆಂಗಳೂರು: ನವೆಂಬರ್ 1 ರಿಂದ ಆರಂಭವಾಗಲಿರುವ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯ ರಥಕ್ಕೆ ಇಂದು ಚಾಲನೆ ಸಿಕ್ಕಿದೆ.
ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಥಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದ್ದಾರೆ. ನವೆಂಬರ್ 1 ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ರಥಯಾತ್ರೆ ಆರಂಭವಾಗಲಿದೆ.
1994ರಲ್ಲಿ ಹೆಚ್.ಡಿ. ದೇವೇಗೌಡರು ಕೂಡಾ ಕುರುಡುಮಲೆಯಿಂದಲೇ ಚುನಾವಣಾ ಪ್ರಚಾರ ಆರಂಭ ಮಾಡಿ ಬಹುಮತ ಗಳಿಸಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದ್ದರು.
ನವೆಂಬರ್ 1 ರಿಂದ 5ರವರೆಗೆ ಕೋಲಾರ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಲಿದೆ. ನ.6 ರಿಂದ 10 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ, 11 ರಿಂದ 13 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ, 14 ರಿಂದ 23 ರವರೆಗೆ ತುಮಕೂರು ಜಿಲ್ಲೆ, 24 ರಿಂದ 30 ರವರೆಗೆ ಹಾಸನ ಜಿಲ್ಲೆಯಲ್ಲಿ, ಡಿಸೆಂಬರ್ 1 ರಂದು ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಡಿಸೆಂಬರ್ 2 ರಿಂದ 5 ರವರೆಗೆ ರಾಮನಗರ ಜಿಲ್ಲೆಯಲ್ಲಿ ಒಟ್ಟು 35 ದಿನಗಳ ಕಾಲ ರಥಯಾತ್ರೆ ಸಂಚಾರ ಮಾಡಲಿದೆ.
2023ರ ಜನವರಿ ತಿಂಗಳಲ್ಲಿ ಮೈಸೂರು ಭಾಗದಲ್ಲಿ ಎರಡನೇ ಹಂತದಲ್ಲಿ ರಥಯಾತ್ರೆ ನಡೆಯಲಿದ್ದು, ಒಟ್ಟು 120 ಕ್ಷೇತ್ರಗಳಿಗೆ ಮಾರ್ಚ್ 15 ರ ವರೆಗೆ ಪಂಚರತ್ನ ಕಾರ್ಯಕ್ರಮ ನಡೆಯಲಿದೆ.