ಮಂಗಳೂರು: ಸೇಂಟ್ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಚಾರದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಇತರ ಮೇಲೆ ದಾಖಲಿಸಿದ ಪ್ರಕರಣ ಹಿಂಪಡೆಯಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಕಾರ್ಯಕರ್ತರು ಸೋಮವಾರದಂದು ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಗರ ಪೊಲೀಸ್ ಕಮಿಷನರ್ಗೆ ಮನವಿ ಕೊಡುವುದಾಗಿ ಹೇಳಿ ‘ಜೈ ಶ್ರೀರಾಮ’ ಘೋಷಣೆ ಕೂಗುತ್ತ ಮೆರವಣಿಗೆ ಹೊರಟಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಆರಂಭದಲ್ಲಿ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ಆರಂಭಿಸಿದ ಪ್ರತಿಭಟನಕಾರರು ನಂತರ ಕ್ಲಾಕ್ ಟವರ್ ಎದುರಿನ ರಸ್ತೆಯಲ್ಲಿ ನಿಂತು ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವಾನಂದ ಮೆಂಡನ್, ‘ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿ ಪಾಠ ಮಾಡಿದ್ದನ್ನು ಮಕ್ಕಳು ಮನೆಗೆ ಬಂದು ಹೇಳಿದ್ದರು. ಮಕ್ಕಳ ಪಾಲಕರು ಈ ಬಗ್ಗೆ ದೂರು ಕೊಟ್ಟರೆ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಆದರೆ, ಶಿಕ್ಷಕಿಯನ್ನು ವಜಾಗೊಳಿಸಬೇಕೆಂದು ಪ್ರತಿಭಟನೆ ಮಾಡಿದ ಶಾಸಕರು, ಮಹಾನಗರ ಪಾಲಿಕೆ ಸದಸ್ಯರು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಾವು ಪೊಲೀಸ್ ಕಮಿಷನರ್ ಕಚೇರಿಗೆ ಮೆರವಣಿಗೆ ತೆರಳಿ ಮನವಿ ಸಲ್ಲಿಸಲು ಅವಕಾಶ ಕೊಡಬೇಕು. ನೀವು ಅವಕಾಶ ನೀಡದಿದ್ದರೂ ನಾವು ಮೆರವಣಿಗೆಯಲ್ಲಿ ಹೋಗಿ ಮನವಿ ಕೊಟ್ಟೆ ಕೊಡುತ್ತೇವೆ’ ಎಂದು ಆರೋಪಿಸಿದರು.
ಪ್ರತಿಭಟನಕಾರರು, ಪೊಲೀಸರು ಹಾಕಿದ್ದ ಬ್ಯಾರಿಕೇಟ್ ಬದಿಗೆ ಸರಿಸಿ, ಮುನ್ನುಗ್ಗಿದರು. ಪ್ರತಿಭಟನಕಾರರಲ್ಲಿ ಕೆಲವರು ರಸ್ತೆಯ ಮೇಲೆ ಮಲಗಿ ಜೈ ಶ್ರೀರಾಮ ಘೋಷಣೆ ಕೂಗಿದರು. ಪ್ರತಿಭಟನಕಾರರು ಮೆರವಣಿಗೆ ಪೂರ್ವ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.