ಬೆಳಗಾವಿ: ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಶ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಶ್ನೆಗೆ ಅರಣ್ಯ ಸಚಿವ ಖಂಡ್ರೆ ಈ ಉತ್ತರ ನೀಡಿದ್ದಾರೆ.
ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತಾರಣ್ಯಕ್ಕೆ ಹೊಂದಿಕೊಂಡಂತೆ ಹಾಗೂ 100 ಮೀಟರ್ ವ್ಯಾಪ್ತಿಯಲ್ಲಿನ ಭೂಮಿ ಮಂಜೂರಾತಿ ಪೂರ್ವದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಸಮ್ಮತಿ ಪಡೆಯುವುದು ಕಡ್ಡಾಯವಾಗಿದೆ. ರೈತರು ಕಂದಾಯ ಇಲಾಖೆ ಸಾಗುವಳಿ ಚೀಟಿಗೆ ಸಂಬಂಧಿಸಿದಂತೆ ನಿರಾಪೇಕ್ಷಣಾ ಪತ್ರ ಕೋರಿದಾಗ ಅರಣ್ಯ ಇಲಾಖೆಯ ದಾಖಲೆ, ಅಧಿಸೂಚನೆ ಹಾಗೂ ನಕಾಶೆಗಳೊಂದಿಗೆ ಪರಿಶೀಲಿಸಿ ಜಾಗವು ಅರಣ್ಯ ಪ್ರದೇಶ ವ್ಯಾಪ್ತಿಗೆ ಬರುತ್ತದೆಯೇ ಅಥವಾ ಇಲ್ಲವೇ ಎಂದು ಹಿಂಬರಹ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಅಲ್ಲದೇ, ಅಧಿಸೂಚಿತ ಹಾಗೂ ಡೀಮ್ಡ್ ಅರಣ್ಯ ಅರಣ್ಯ ಪ್ರದೇಶಗಳಿಗೆ ಸರ್ವೆ ನಂಬರ್ ವಾರು ವಿವರವಾದ ಮಾಹಿತಿ ಇಲ್ಲದಂತಹ ಸಂದರ್ಭದಲ್ಲಿ ನಿರಾಕ್ಷೇಪಣಾ ಪತ್ರ ನೀಡಲು ಕಂದಾಯ ಇಲಾಖೆಯೊಂದಿಗೆ ಜಂಟಿ ಮೋಜಣಿ ಮಾಡಲಾಗುವುದು ಎಂದರು.
ಬೆಳ್ತಂಗಡಿ ಪ್ರದೇಶದ ರಿ.ಸಂ.69ರಲ್ಲಿ ಅರಣ್ಯ ಭೂಮಿ ಬಗ್ಗೆ ಜಂಟಿ ಸರ್ವೆ ಕೈಗೊಂಡಾಗ 500 ಎಕರೆ ಅಧಿಕ ಭೂಮಿ ಅರಣ್ಯ ಇಲಾಖೆ ಭೂಮಿಯೊಂದಿಗೆ ಇರುವುದು ಕಂಡುಬಂದಿದೆ. ಸರ್ಕಾರ ಅರಣ್ಯ ಅರಣ್ಯ ಭೂಮಿ ಗಡಿ ಗುರುತಿಸಿಲು ಜಂಟಿ ಸರ್ವೆ ನಡೆಸಬೇಕು. ಅರಣ್ಯ ಹಾಗೂ ಕಂದಾಯ ಇಲಾಖೆ ಮೊಜಣಿಗೆ ಕಾಲಮಿತಿ ನಿಗದಿ ಪಡಿಸುವಂತೆ ಶಾಸಕ ಹರೀಶ್ ಪೂಂಜಾ ಸದನದಲ್ಲಿ ಸಚಿವರಲ್ಲಿ ಕೋರಿದರು.