ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ. ರಾತ್ರಿ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿರುವ ನಡ್ಡಾ ನಾಳೆ ಬೆಳಿಗ್ಗೆ ಉಡುಪಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಮಾವೇಶ, ಮಧ್ಯಾಹ್ನ ಬೈಂದೂರಿನಲ್ಲಿ ಸಾರ್ವಜನಿಕ ಸಭೆ, ಸಂಜೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಹಾಗೂ ಶೃಂಗೇರಿಯಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ರಾತ್ರಿ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿರುವ ನಡ್ಡಾ, ಶಾರದಾ ಪೀಠದ ಭಾರತೀ ತೀರ್ಥ ಸ್ವಾಮೀಜಿಯವರನ್ನೂ ಭೇಟಿ ಮಾಡಿ ಶಾರದಾಂಬೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಫೆಬ್ರವರಿ 21ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಪ್ರಬುದ್ಧರ ಸಭೆ, ಮಧ್ಯಾಹ್ನ ಬೇಲೂರಿನಲ್ಲಿ ಸಾರ್ವಜನಿಕ ಸಭೆ ಹಾಗೂ ಸಂಜೆ ಹಾಸನದಲ್ಲಿ ಪಕ್ಷದ ಬೂತ್ ಮಟ್ಟದ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಡಿದ್ದು ಸಂಜೆ ಹಾಸನದಿಂದ ಬೆಂಗಳೂರಿಗೆ ತೆರಳಲಿರುವ ಜೆ.ಪಿ. ನಡ್ಡಾ, ಎರಡು ದಿನಗಳ ರಾಜ್ಯ ಪ್ರವಾಸ ಮುಗಿಸಿ ರಾತ್ರಿ ದೆಹಲಿಗೆ ಹಿಂತಿರುಗಲಿದ್ದಾರೆ.