ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಇಂದು ಸಚಿವ ಕೆ. ಸುಧಾಕರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ತಮ್ಮನ್ನು ಪಕ್ಷದಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂಬ ಅಸಮಾಧಾನ ಹೊಂದಿರುವ ಮುನಿಯಪ್ಪ ಬಹಿರಂಗವಾಗಿಯೇ ಇದನ್ನು ಹೇಳಿಕೊಂಡಿದ್ದರು. ಇದಾದ ಬಳಿಕ ಕಾಂಗ್ರೆಸ್ಸಿನ ಕೇಂದ್ರ ನಾಯಕರು ಮುನಿಯಪ್ಪ ಅವರನ್ನು ಭೇಟಿಯಾಗಿ ಸಮಾಧಾನಪಡಿಸುವ ಕಾರ್ಯ ಮಾಡಿದ್ದರು.
ಇದರ ಬೆನ್ನಲ್ಲೇ ಇಂದು ಸಚಿವ ಸುಧಾಕರ್ ನಿವಾಸಕ್ಕೆ ಕೆ.ಎಚ್. ಮುನಿಯಪ್ಪ ಭೇಟಿ ನೀಡಿದ್ದಾರೆ. ಈ ಮೊದಲು ಸಹ ಸುಧಾಕರ್ ಅವರನ್ನು ಭೇಟಿ ಮಾಡಿ ಮುನಿಯಪ್ಪ ಮಾತುಕತೆ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಸುಧಾಕರ್ ಮಾತನಾಡಿ, ಮುನಿಯಪ್ಪ ಬಿಜೆಪಿ ಸೇರುವ ಸಾಧ್ಯತೆಯಿದೆ. ಇನ್ನುಳಿದ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆಗೊಳ್ಳುವ ಸುಳಿವು ಸಿಕ್ಕಿದೆ ಎಂಬ ಮಾಹಿತಿ ನೀಡಿದ್ದಾರೆ. ಹಾಗಾಗಿ ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.


