ಕಡಬ: 2020ರಲ್ಲಿ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ತೀರ್ಪು ನೀಡಿದ್ದು, ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಕಡಬ ತಾಲೂಕಿನ ಕೊಡಿಜಾಲು ನಿವಾಸಿ ಜಯಾನಂದ ಕೆ. (60) ಎಂಬಾತನ ವಿರುದ್ಧ ಆ್ಯಸಿಡ್ ದಾಳಿ ನಡೆಸಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ತನಿಖೆ ನಡೆಸಿದ್ದ ಪುತ್ತೂರು ಮಹಿಳಾ ಠಾಣೆಯ ಆಗಿನ ಪೊಲೀಸ್ ಇನ್ಸ್ಪೆಕ್ಟರ್ ಕುಸುಮಧರ ಅವರು ನ್ಯಾಯಾಲಯಕ್ಕೆ ಸುದೀರ್ಘ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸದಾನಂದ ನಾಗಪ್ಪನಾಯ್ಕ್ ಅವರು ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 326 (A) ಅಡಿಯಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 3,00,000 ರೂಪಾಯಿ ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 2 ವರ್ಷಗಳ ಸರಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಜೊತೆಗೆ ಸೆಕ್ಷನ್ 504 ರ ಅಡಿಯಲ್ಲಿ 1 ವರ್ಷದ ಕಾರಾಗೃಹ ಶಿಕ್ಷೆ ಹಾಗೂ 5,000 ರೂಪಾಯಿ ದಂಡ ವಿಧಿಸಲಾಗಿದ್ದು, ಇದನ್ನು ತೆರಲು ತಪ್ಪಿದರೆ ಮತ್ತೆ 3 ತಿಂಗಳ ಸರಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯಾವರ, ಪ್ರಕಾಶ್ಚಂದ್ರ ಶೆಟ್ಟಿ ಮತ್ತು ಜಯಂತಿ ಕೆ. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.


