ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಪ್ರೀತಿಯ ನಿರಾಕರಣೆಯೇ ಕಾರಣ ಅನ್ನೋದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.ಪ್ರಕರಣದ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (23) ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಆಸಿಡ್ ದಾಳಿಗಾಗಿ ಹೇಗೆ ಸಿದ್ಧವಾಗಿ ಬಂದಿದ್ದ ಗೊತ್ತಾ ಆರೋಪಿ?
ಆರೋಪಿ ಆಸಿಡ್ ದಾಳಿಗಾಗಿ ಮೊದಲೇ ಎಲ್ಲಾ ರೀತಿ ತಯಾರಿ ಮಾಡಿಕೊಂಡಿದ್ದ. ಅದರಂತೆ ಇಂದು(ಸೋಮವಾರದಂದು) ಕಡಬ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ಆಗಮಿಸಿದ್ದ .ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಇತರ ವಿದ್ಯಾರ್ಥಿಗಳೊಂದಿಗೆ ಜಗಲಿಯಲ್ಲಿ ಕುಳಿತಿದ್ದ ಎನ್ನಲಾಗಿದೆ. ಪರಿಸರದ ಇತರ ಕಾಲೇಜಿನಿಂದಲೂ ಈ ಪರೀಕ್ಷಾ ಕೇಂದ್ರಕ್ಕೆ ಎಕ್ಸಾಂ ಬರೆಯಲು ವಿದ್ಯಾರ್ಥಿಗಳು ಬಂದಿದ್ದರಿಂದ ಈತನ ಬಗ್ಗೆ ಯಾರೂ ಅನುಮಾನಗೊಂಡಿರಲಿಲ್ಲ.
ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಪ್ರಶ್ನೆ ಪತ್ರಿಕೆಗಳ ಬಂಡಲನ್ನು ಕಛೇರಿಯಲ್ಲಿ ಬಿಚ್ಚುತ್ತಿದ್ದ ವೇಳೆ ವಿದ್ಯಾರ್ಥಿಗಳ ಚೀರಾಟ ಕೇಳಿ ಹೊರ ಬಂದಿದ್ದಾರೆ. ಅದಾಗಲೇ ಆರೋಪಿಯು ಆ್ಯಸಿಡ್ ಎರಚಿ ಪರಾರಿಯಾಗುತ್ತಿದ್ದ. ಈ ವೇಳೆ ವಿದ್ಯಾರ್ಥಿಗಳು ಆತನನ್ನು ಬೆನ್ನಟ್ಟಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ
ಘಟನೆಯಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯ ಜೊತೆಗಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗಲಿ ಸುಟ್ಟ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರೀತಿ ನಿರಾಕರಣೆಯೇ ಘಟನೆಗೆ ಕಾರಣನಾ?
ಆರೋಪಿಯು ಸಂತ್ರಸ್ತ ವಿದ್ಯಾರ್ಥಿನಿಯ ತಾಯಿಯ ಊರಾದ ಮಲಪ್ಪುರಂ ನಿವಾಸಿಯಾಗಿದ್ದು, ದೂರದ ಸಂಬಂಧಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂತ್ರಸ್ತ ಯುವತಿಯನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಆ್ಯಸಿಡ್ ದಾಳಿ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದ ವಿದ್ಯಾರ್ಥಿನಿಯ ಮೇಲೆ ಕೇರಳದ ಮಲಪ್ಪುರಂ ನಿವಾಸಿ ಅಬಿನ್ ಎಂಬಾತ ಆ್ಯಸಿಡ್ ಎರಚಿದ್ದು, ಇದರಿಂದಾಗಿ ಆಕೆಯ ಜೊತೆಗಿದ್ದ ಸಹಪಾಠಿಗಳಾದ ಇತರ ಇಬ್ಬರಿಗೂ ಸುಟ್ಟ ಗಾಯಗಳಾಗಿದ್ದು, ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇಲ್ನೋಟಕ್ಕೆ ಪ್ರೇಮ ನಿರಾಕರಣೆಯ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವುದಾಗಿ ತಿಳಿದು ಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ತಿಳಿಸಿದ್ದಾರೆ,