ಮಂಗಳೂರು; ಹ್ಯಾಕರ್ ಗಳ ಮೋಸದ ಜಾಲಕ್ಕೆ ಸಿಲುಕಿ ಜೈಲು ಸೇರಿದ್ದ ಕಡಬದ ಐತ್ತೂರು ಗ್ರಾಮದ ಮೂಜೂರು ಯುವಕ ಚಂದ್ರಶೇಖರ್ ಬಂಧ ಮುಕ್ತವಾಗಿದ್ದು ಇಂದು ಸ್ವಗ್ರಾಮಕ್ಕೆ ಆಗಮಿಸಲಿದ್ದಾರೆ.
ಸೌದಿ ಅರೇಬಿಯಾದ ರಿಯಾದ್ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಇಂದು ಊರಿಗೆ ಆಗಮಿಸಲಿದ್ದಾರೆ.ರಿಯಾದ್ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಕೆಲಸದಲ್ಲಿ ಪದೋನ್ನತಿ ಪಡೆದು ಸೌದಿ ಅರೇಬಿಯಾಕ್ಕೆ 2022ರಲ್ಲಿ ತೆರಳಿದ್ದರು. ಅಲ್ಲಿ ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪೆನಿಯಲ್ಲಿದ್ದರು. 2022ರ ನವೆಂಬರ್ನಲ್ಲಿ ಮೊಬೈಲ್ ಮತ್ತು ಸಿಮ್ ಖರೀದಿಗೆ ರಿಯಾದ್ನ ಅಂಗಡಿಗೆ ಭೇಟಿ ನೀಡಿದ್ದರು. ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್) ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್ ಅವರನ್ನು ಬಂಧಿಸಿದ್ದರು.