ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ಭಾನುವಾರ ಮುಂಜಾನೆ ಸರಣಿ ಅಪಘಾತ ಸಂಭವಿಸಿದ್ದು, ಮದ್ಯದ ಲೋಡ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಘಟನೆಯಲ್ಲಿ ಮೂರು ವಾಹನಗಳು ಜಖಂಗೊಂಡಿವೆ.
ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ, ಬೆಂಗಳೂರು ನೆಲಮಂಗಲ ನಿವಾಸಿ ರಾಜ ಎಂ. (56) ಅವರಿಗೆ ಸೇರಿದ ಮದ್ಯದ ಲಾರಿಗೆ ಶಮೀರ್ ಎಂಬವರು ಚಲಾಯಿಸುತ್ತಿದ್ದ ಮತ್ತೊಂದು ಲಾರಿ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಮದ್ಯದ ಲಾರಿಯು ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಗ್ಯಾಸ್ ಟ್ಯಾಂಕರ್ಗೆ ಉಜ್ಜಿಕೊಂಡು ರಸ್ತೆಯ ಎಡಬದಿಗೆ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಮದ್ಯದ ಲಾರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯದ ಬಾಟಲಿಗಳು ಒಡೆದು ಹಾನಿಯಾಗಿದ್ದು, ವಾಹನಗಳು ಜಖಂಗೊಂಡಿವೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಮಾಲೀಕ ರಾಜ ಎಂ. ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


