ಕಲಬುರಗಿ: ಒಳಚರಂಡಿ ಸ್ವಚ್ಛಗೊಳಿಸಲು ಇಳಿದ ಇಬ್ಬರು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಕಲಬುರ್ಗಿಯ ಕೈಲಾಶ್ ನಗರದಲ್ಲಿ ಘಟನೆ ನಡೆದಿದ್ದು, ಜಲಮಂಡಳಿ ನಿರ್ಲಕ್ಷಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ. ಲಾಲ್ ಅಹಮ್ಮದ್(25), ರಷೀದ್(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆನ್ನಲಾಗಿದೆ.
ಒಳಚರಂಡಿ ಕಟ್ಟಿಕೊಂಡಿದ್ದರಿಂದ ಸ್ವಚ್ಛಗೊಳಿಸಲು ಇವರು ಇಳಿದಿದ್ದರು. 18 ಅಡಿ ಆಳದಲ್ಲಿ ಇಳಿದು ಕೆಲಸ ಮಾಡುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಘಟನೆ ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಲಬುರಗಿ ಜಿಲ್ಲಾ ಆಸ್ಪತ್ರೆ ಎದುರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಪಡಿಸಿದ ಪ್ರತಿಭಟನಾಕಾರರು ಜಲ ಮಂಡಳಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಯಂತ್ರಗಳ ಮೂಲಕ ಮಾಡಬೇಕಿದ್ದ ಕೆಲಸವನ್ನು ಮನುಷ್ಯರ ಮೂಲಕ ಮಾಡಿಸಲಾಗಿದೆ. ತಕ್ಷಣ ಅಧಿಕಾರಿಗಳು ಎಚ್ಚೆತ್ತಿದ್ದರೂ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಗೋಳು ತೋಡಿಕೊಂಡರು.
ಮೃತರ ಕುಟುಂಬಗಳಿಗೆ ಸೂಕ್ತ ನ್ಯಾಯ ಒದಗಿಸಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜರಗಿಸುವಂತೆ ಪ್ರತಿಭಟನಾಕಾರರು ಹಾಗೂ ಕುಟುಂಬದ ಸದಸ್ಯರು ಆಗ್ರಹಿಸಿದರು.