ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ವಿಕಾಸಸೌಧದಿಂದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಸಚಿವ ತಂಗಡಗಿ ಈ ಸೂಚನೆ ನೀಡಿದ್ದಾರೆ.
ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ತುಮಕೂರುಗಳಲ್ಲಿ
ಕನ್ನಡಪರ ಸಂಘಟನೆಗಳು ಹೆಚ್ಚಾಗಿ ಪ್ರತಿಭಟನೆ ನಡೆಸುತ್ತಿದ್ದು, ಅದನ್ನು ನಿಯಂತ್ರಿಸಲು ಕನ್ನಡ ನಾಮಫಲಕ ಅಳವಡಿಕೆ ಶೇಕಡಾ 100ರಷ್ಟು ಆಗಬೇಕು ಎಂದು ತಾಕೀತು ಮಾಡಿದ್ದಾರೆ.
ಇದೇ ವೇಳೆ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಬಳಕೆ ವಿಚಾರದಲ್ಲಿ ಮಾರ್ಚ್ 12ರಂದು ಅನುಷ್ಠಾನ ವರದಿ ನೀಡುವಂತೆ ಡಿಸಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ ನೀಡಿದ್ದಾರೆ.
ಅಲ್ಲದೇ, ಪ್ರತಿ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಡಿಸಿಗಳಿಗೆ ಸಚಿವ ತಂಗಡಗಿ ನಿರ್ದೇಶನ ನೀಡಿದ್ದಾರೆ.