ಚೆನ್ನೈ: ಹಿರಿಯ ನಟಿ ಹಾಗೂ ಕಾಂಗ್ರೆಸ್ ನಾಯಕಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದ್ದು, ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಈ ಬೆನ್ನಲ್ಲೇ ನಟಿ ಖುಷ್ಬೂ ಸುಂದರ್ ಅವರನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ತೆಗೆದುಹಾಕಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಣವ್ ಝಾ ಸೋಮವಾರ ಬೆಳಗ್ಗೆ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಖುಷ್ಬೂ ಅವರನ್ನು ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದ್ದಾರೆ.
2014ರ ಸೆಪ್ಟೆಂಬರ್ ನಲ್ಲಿ ಡಿಎಂಕೆ ಪಕ್ಷ ತೊರೆದಿದ್ದ ಖುಷ್ಬೂ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ ಕಒಂದೆರೆಡು ತಿಂಗಳಿಂದ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಊಹಾಪೋಹ ಎದ್ದಿದ್ದವು.

ಖುಷ್ಬೂ ಅವರು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರೆ ಹಿರಿಯ ನಾಯಕರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಖುಷ್ಬೂ ಅವರೊಂದಿಗೆ ಐಆರ್ ಎಸ್ ಅಧಿಕಾರಿ, ಖ್ಯಾತ ಯೂಟ್ಯೂಬರ್ ಒಬ್ಬರು ಕೂಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.


