ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಈಗ ಭಾರೀ ಹೈಡ್ರಾಮಾ ಸೃಷ್ಟಿಸಿದೆ.ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಲು ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮಂಗಳೂರಿಗೆ ವಿಮಾನದ ಟಿಕೆಟ್ ಬುಕ್ ಮಾಡಿದ್ದ ಘಟನೆಯೂ ನಡೆದಿದೆ.
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿತ್ತು. ಇದನ್ನು ವಿರೋಧಿಸಿ ಸಚಿವ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಕೆ.ಎಂ. ನಂಜೇಗೌಡ ಮತ್ತು ಕೊತ್ತನೂರು ಮಂಜುನಾಥ್ ಮುಂದಾಗಿದ್ದು ಸ್ಪೀಕರ್ ಭೇಟಿ ಮಾಡಲು ಸಂಜೆ ಮಂಗಳೂರಿಗೆ ವಿಮಾನದ ಟಿಕೆಟ್ ಕೂಡಾ ಕಾಯ್ದಿರಿಸಿದ್ದರು.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿರುವ ಕಾರಣ ಮಂಗಳೂರಿನಲ್ಲೇ ಸ್ಪೀಕರ್ ಭೇಟಿ ಮಾಡಿ ರಾಜೀನಾಮೆ ನೀಡಲು ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮುಂದಾಗಿದ್ದರು.
ಆದರೆ ಸ್ಪೀಕರ್ ಖಾದರ್ ತಾವೇ ಮಂಗಳೂರಿನಿಂದ ಬೆಂಗಳೂರಿಗೆ ಬರುವುದಾಗಿ ಹೇಳಿದ ಕಾರಣ ಶಾಸಕರು ಮಂಗಳೂರು ಪ್ರಯಾಣವನ್ನು ರದ್ದುಪಡಿಸಿದ್ದಾರೆ.
ಈ ಮಧ್ಯೆ ಕೋಲಾರ ಜಿಲ್ಲೆಯ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಮತ್ತು ಅನಿಲ್ ಕುಮಾರ್ ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ್ದಾರೆ.