ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆದಂತೆಯೇ, ಕೆಪಿಎಸ್ಸಿ ಹಗರಣದ ಹೊಣೆ ಹೊತ್ತು ಸಚಿವ ಪ್ರಿಯಾಂಕ್ ಖರ್ಗೆ ಕೂಡ ಶೀಘ್ರವೇ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದರು.
ವಾಲ್ಮೀಕಿ ನಿಗಮದ ಹಣಕಾಸು ಅಕ್ರಮ, ಕೆಪಿಎಸ್ಸಿ ಅಕ್ರಮ ಹಾಗೂ ಬರ ಪರಿಹಾರದ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಪಾದಯಾತ್ರೆ ನಡೆಸುತ್ತಿದ್ದು, ಸದನದಲ್ಲಿ ತಾವು ನಡೆಸಿದ ತೀವ್ರ ಹೋರಾಟದ ಫಲವಾಗಿಯೇ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.
ದಲಿತರು ಮತ್ತು ಬಡವರ ಪ್ರತಿಯೊಂದು ಪೈಸೆ ತಲುಪುವವರೆಗೆ ತಮ್ಮ ಹೋರಾಟ ಮುಂದುವರಿಯಲಿದೆ ಎಂದ ಅವರು, ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗುವ ಕುರಿತು ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಎನ್ಡಿಎ ಮೈತ್ರಿಕೂಟದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಮರ್ಥಿಸಿಕೊಂಡ ಅಶೋಕ್, ತಮ್ಮ ಪಾದಯಾತ್ರೆಗೆ ಎದುರಾಗಿ ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ದಲಿತರ ದುಡ್ಡನ್ನು ಲೂಟಿ ಮಾಡಿದ್ದಾರೋ ಇಲ್ಲವೋ ಎಂಬುದಕ್ಕೆ ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಉತ್ತರಿಸಲಿ ಎಂದು ಸವಾಲೆಸೆದರು.


