ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (ಕೆಎಸ್ಎಟಿ) ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ (ಪಿಎಸ್ಐ) ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ.
ನ್ಯಾಯಿಕ ಸದಸ್ಯರಾದ ಟಿ ನಾರಾಯಣ ಸ್ವಾಮಿ ಮತ್ತು ಜಿ ಲತಾ ಕೃಷ್ಣರಾವ್ ಅವರ ನೇತೃತ್ವದ ವಿಭಾಗೀಯ ಪೀಠವು, “ಬೆಂಗಳೂರಿನ ಪವಿತ್ರ ಎಲ್ ಎನ್ ಸೇರಿದಂತೆ 28 ಅಭ್ಯರ್ಥಿಗಳು “ಕಳಂಕ ರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಈಗಾಗಲೇ ಹೊರಡಿಸಿರುವ ಆದೇಶದ ಪ್ರಕಾರ ನೇಮಕಾತಿ ನಡೆಸಲು ಆದೇಶಿಸಬೇಕು” ಎಂದು ಕೋರಿದ್ದ ಅರ್ಜಿಯನ್ನು ವಜಾ ಮಾಡಿದೆ. ಪೊಲೀಸ್ ಇಲಾಖೆಯ 545 ಸಬ್ ಇನ್ಸ್ಪೆಕ್ಟರ್ಗಳ ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ರಾಜ್ಯದಾದ್ಯಂತ ಸಂಚಲನಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರವು ಈ ಹಿನ್ನೆಲೆಯಲ್ಲಿ ಮರುಪರೀಕ್ಷೆಗೆ ಮುಂದಾಗಿದೆ. ಆದರೆ, ರಾಜ್ಯ ಸರ್ಕಾರದ ಈ ನಡೆಯಿಂದ ಯಾವುದೇ ಅಕ್ರಮವೆಸಗದೆ ಕಳಂಕ ರಹಿತವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ “ಕಳಂಕ ರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಈಗಾಗಲೇ ಹೊರಡಿಸಿರುವ ಆದೇಶದ ಪ್ರಕಾರ ನೇಮಕಾತಿ ನಡೆಸಬೇಕು” ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಇನ್ನು ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಿ ಆರ್ ರವಿಶಂಕರ್ ಅವರು, “ಪಿಎಸ್ಐ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದ ಅಕ್ರಮದ ಕುರಿತಾಗಿ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದ್ದು, ಮಧ್ಯಂತರ ವರದಿ ಆಧರಿಸಿ ರಾಜ್ಯ ಸರ್ಕಾರವು ಮರುಪರೀಕ್ಷೆ ನಡೆಸುವುದಾಗಿ ಆದೇಶಿಸಿದೆ. ಸಿಐಡಿ ತನಿಖೆ ಪೂರ್ಣಗೊಳ್ಳದಿರುವಾಗ ಇಡೀ ನೇಮಕಾತಿ ರದ್ದುಪಡಿಸುವ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ವಾದಿಸಿದ್ದರು ಎಂದು ತಿಳಿದು ಬಂದಿದೆ
ಪ್ರತಿ ಪರೀಕ್ಷೆಯಲ್ಲೂ ಟಾಪರ್ ಆಗಿ ಹೊರಹೊಮ್ಮಲಾಗದು. ಹೀಗಾಗಿ, ಮರುಪರೀಕ್ಷೆಗೆ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಸುಬ್ರಹ್ಮಣ್ಯ ಅವರು ಹಗರಣ ವ್ಯಾಪಕವಾಗಿರುವುದರಿಂದ ಕಳಂಕಿತರು ಮತ್ತು ಕಳಂಕರಹಿತರನ್ನು ಪ್ರತ್ಯೇಕಿಸಲಾಗದು. ಪೊಲೀಸ್ ನೇಮಕಾತಿ ವಿಭಾಗದ ಪ್ರಮುಖ ಅಧಿಕಾರಿಗಳು ಬಂಧಿತರಾಗಿದ್ದು, ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಳ್ಳಲು ಇನ್ನೂ ಕಾಲಾವಕಾಶ ಬೇಕಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗದು ಎಂದು ವಾದಿಸಿದ್ದರು.
ಕಲಬುರಗಿಯ ಒಂದು ಪರೀಕ್ಷಾ ಕೇಂದ್ರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಿಐಡಿ ಮಧ್ಯಂತರ ವರದಿ ಸಲ್ಲಿಸಿದೆ. ಇದನ್ನು ಆಧರಿಸಿ ಈಗ ಮರುಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಪಿಎಸ್ಐ ಹುದ್ದೆಗೆ 1.2 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಕಿದ್ದು, ದೈಹಿಕ ಪರೀಕ್ಷೆ ಮುಗಿದು 54,104 ಮಂದಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಶೇ. 1ರಷ್ಟು ಅಭ್ಯರ್ಥಿಗಳೂ ಆಯ್ಕೆಯಾಗಿಲ್ಲ ಎಂದು ತಿಳಿದು ಬಂದಿದೆ