ಕುಂದಾಪುರ: ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಯಾನೆ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿಯನ್ನು ಬಂಧಿಸಲಾಗಿದೆ. ಇವರು ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಬಂಧಿಸಲಾಗಿದೆ. ನಿನ್ನೆ ರಾತ್ರಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಎಚ್. ಇಸ್ಮಾಯಿಲ್ಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. .ಗಣೇಶ್ ಶೆಟ್ಟಿಯನ್ನು ಜೆಎಂಎಫ್ಸಿ ನ್ಯಾಯಾಧೀಶೆ ರೋಹಿಣಿ ಅವರ ನಿವಾಸದಲ್ಲಿ ಹಾಜರುಪಡಿಸಲಾಗಿದ್ದು ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಬಹುಕೋಟಿ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ಅವರು ಮೇ 26ರ ಬೆಳಗ್ಗೆ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಅವರ ಮನೆಯ ಸಿಟೌಟ್ನಲ್ಲಿ ತನ್ನ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದ ಡೆತ್ನೋಟ್ ನಲ್ಲಿ ಗಣೇಶ್ ಶೆಟ್ಟಿ ಹಾಗೂ ಎಚ್. ಇಸ್ಮಾಯಿಲ್ ಅವರ ಹೆಸರು ಪ್ರಸ್ತಾಪ ಆಗಿತ್ತು. ಗೋಲ್ಡ್ ಜ್ಯುವೆಲರಿ ಹೆಸರಿನಲ್ಲಿ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ 3.34 ಕೋ.ರೂ. ಮತ್ತು 5 ಕೆ.ಜಿ ಚಿನ್ನ ಪಡೆದುಕೊಂಡಿದ್ದರು. ಇದರ ಬಡ್ಡಿ, ಅಸಲು ಸೇರಿ ಈಗ 9 ಕೋ.ರೂ. ಆಗಿದ್ದು, ಇದನ್ನು ನೀಡದೇ ಮೋಸ ಮಾಡಿರುವುದಾಗಿ ಬರೆದುಕೊಂಡಿದ್ದರು. ದೊಡ್ಡ ಮಟ್ಟದಲ್ಲಿ ಉದ್ಯಮಗಳನ್ನು ಹೊಂದಿದ್ದ ಕಟ್ಟೆ ಗೋಪಾಲಕೃಷ್ಣ ಅವರು ಕೊರೊನಾ ನಂತರ ಉದ್ಯಮದಲ್ಲಿ ನಷ್ಟ ಹೊಂದಿದ್ದರು ಎನ್ನಲಾಗಿದೆ.