ಉದ್ಯೋಗ ಕೊಡಿಸುವ ನೆಪದಲ್ಲಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಕುಂದಾಪುರ ಮೂಲದ ವ್ಯಕ್ತಿಯೊಬ್ಬನನ್ನು ಇಲ್ಲಿನ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕುಂದಾಪುರದ ಬಸ್ರೂರು ಮೂಲದ ರಾಘವ ಅಲಿಯಾಸ್ ರಾಘವೇಂದ್ರ (39) ಎಂದು ಗುರುತಿಸಲಾಗಿದೆ.
ರಾಘವ ಅವರು ಕೇಂದ್ರ ಭೂಮಾಪನ ಇಲಾಖೆಯ ಹಿರಿಯ ಅಧಿಕಾರಿಯಂತೆ ನಟಿಸಿ ಉದ್ಯೋಗ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ ಜನರಿಂದ ಕೋಟಿ ಕೋಟಿ ವಂಚಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ನಗರದ ಜೆಪಿ ನಗರದಲ್ಲಿ ವಾಸವಿದ್ದ ಆರೋಪಿಯಿಂದ ಹಲವು ದಾಖಲೆಗಳು ಹಾಗೂ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಹತ್ತು ವರ್ಷಗಳ ಹಿಂದೆ ರಾಘವ ಕುಂದಾಪುರದಲ್ಲಿ ಖಾಸಗಿ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದರು. ನಂತರ ಬೆಂಗಳೂರಿಗೆ ತನ್ನ ನೆಲೆಯನ್ನು ಬದಲಿಸಿ ಜೆಪಿ ನಗರದಲ್ಲಿ ಸ್ವಂತ ಕಚೇರಿ ತೆರೆದು ಖಾಸಗಿ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದರು. ಇದೀಗ ಕೇಂದ್ರ ಸರ್ಕಾರದ ಅಧಿಕಾರಿಯಾಗಿ ಕೆಲಸ ಮಾಡುವ ನೆಪದಲ್ಲಿ ಹಲವರಿಗೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.