ಬಂಟ್ವಾಳ ;ಸರಕಾರಿ ಮಟ್ಟದ ಇಲಾಖೆಗಳಿಂದ ಸಿಗುವ ಮಾಹಿತಿಗಳನ್ನು ಸರಿಯಾಗಿ ತಿಳಿದುಕೊಂಡು ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬ್ಯಾಂಕ್ ಆಫ್ ಬರೋಡಾ ಮತ್ತು ಮಾಣಿಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸಹಯೋಗದಲ್ಲಿ ತಾಲೂಕು ಮಟ್ಟದ ವಿಮಾ ಸಪ್ತಾಹದ ಸಲುವಾಗಿ ಜರಗಿದ ಪ್ರಧಾನ ಮಂತ್ರಿ ಜೀವ ವಿಮಾ ಯೋಜನೆಯ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಕಾಣುತ್ತಿರುವ ಕೊರೋನಾ ಇತ್ಯಾದಿ ಆರೋಗ್ಯ ಸಮಸ್ಯೆಗಳ ಬಗ್ಗೆ ಯೋಚಿಸಿದಾಗ ಜನರು ವಿಮಾ ಯೋಜನೆಗಳಲ್ಲಿ ತೊಡಗಿಕೊಳ್ಳುವ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸ್ಥಳೀಯ ಬ್ಯಾಂಕ್ ಆಫ್ ಬರೋಡಾದ ಶಾಖಾ ಪ್ರಬಂಧಕರಾದ ಶ್ಯಾಮ್ ಸ್ವರೂಪ್ ರವರು ಪ್ರಧಾನಮಂತ್ರಿ ಜೀವವಿಮೆಯನ್ನು ಮಾಡಿಸಬೇಕಾದರೆ ಬೇಕಾದ ದಾಖಲೆಗಳು ಹಾಗೂ ಯೋಜನೆಯಿಂದ ಸಿಗುವ ಪ್ರಯೋಜನಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ, ರಮಣಿ.ಡಿ.ಪೂಜಾರಿ, ಸೀತಾ, ಮಿತ್ರಾಕ್ಷಿ, ಮಾಣಿಕ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸೀಮಾ ಪೈ, ಮೇಲ್ವಿಚಾರಕಿ ಲೈಲಾಬಿ ಮತ್ತಿತರರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿ ವಂದಿಸಿದರು.ಸ್ಥಳದಲ್ಲಿಯೇ ಹಲವು ಮಂದಿ ಫಲಾನುಭವಿಗಳ ನೋಂದಣಿಯನ್ನು ಮಾಡಲಾಯಿತು.