ಬೆಂಗಳೂರು: ನಾಳೆ ಕರೆ ನೀಡಲ್ಪಟ್ಟಿದ್ದ ಮದ್ಯ ಮಾರಾಟ ಬಂದ್ ಅನ್ನು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ವಾಪಸ್ ಪಡೆದಿದೆ.
ಬೆಂಗಳೂರಿನಲ್ಲಿ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಬಂದ್ ವಾಪಸ್ ಪಡೆದಿರುವುದಾಗಿ ಹೇಳಿದ್ದಾರೆ.
ನಮ್ಮ ಸಮಸ್ಯೆಗಳನ್ನು ಸಿಎಂ ಕೇಳಿದ್ದು, ಅಬಕಾರಿ ಇಲಾಖೆ ಎಸಿಎಸ್ ಮತ್ತು ಆಯುಕ್ತರಿಗೆ ನಮ್ಮ ಬೇಡಿಕೆ ಕುರಿತು ವರದಿ ಸಲ್ಲಿಸಲು ಹೇಳಿದ್ದಾರೆ ಮತ್ತು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಗೋವಿಂದರಾಜ್ ತಿಳಿಸಿದ್ದಾರೆ.
ಸಿಎಂ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮದ್ಯ ಮಾರಾಟಗಾರರ ಸಂಘದ ಬೇಡಿಕೆಗಳನ್ನು ಆಲಿಸಿದ ಸಿಎಂ ಸಿದ್ದರಾಮಯ್ಯ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಲಂಚದ ಆರೋಪ, ಅಬಕಾರಿ ಸಚಿವರ ರಾಜೀನಾಮೆಗೆ ಒತ್ತಾಯ ಸೇರಿದಂತೆ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ ಕರೆ ನೀಡಲಾಗಿತ್ತು.