
ದೆಹಲಿ: ನೀಟ್ ಪರೀಕ್ಷೆ ವಿಚಾರವಾಗಿ ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ಹಿನ್ನೆಲೆಯಲ್ಲಿ ವೀಕೆಂಡ್ ರಾತ್ರಿ 8 ಗಂಟೆಗೆ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ದೆಹಲಿ ಸರ್ಕಾರ ಆದೇಶಿಸಿದೆ.
ದೆಹಲಿ ಪೊಲೀಸರ ಸೂಚನೆ ಮೇರೆಗೆ ಮದ್ಯದಂಗಡಿಗಳ ಸಮಯ ಬದಲಾವಣೆ ಮಾಡಲಾಗಿದ್ದು, ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬಿಗಿ ಕ್ರಮ ಕೈಗೊಳ್ಳಲಾಗಿದೆ.
ಶನಿವಾರ ಮತ್ತು ಭಾನುವಾರ ರಾತ್ರಿ 8 ಗಂಟೆಗೆ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ಸರ್ಕಾರದ ಆದೇಶ ಮಾಡಿದೆ. ದೆಹಲಿಯಲ್ಲಿ ಸಾಮಾನ್ಯವಾಗಿ ರಾತ್ರಿ 10 ಗಂಟೆಯವರೆಗೆ ಮದ್ಯ ಮಾರಾಟ ಮಳಿಗೆಗಳು ತೆರೆದಿರುತ್ತಿದ್ದವು.
ಇದೇ ವೇಳೆ ಕೇಂದ್ರ ಸರ್ಕಾರದ ಜೊತೆಗೆ ಮೂರನೇ ಹಂತದ ಸಭೆಗೂ ಮೊದಲು ಕಾಕ್ರೋಚ್ ಜನತಾ ಪಾರ್ಟಿ ಪ್ರಮುಖ ಷರತ್ತು ಹಾಕಿದ್ದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೇ ಮುಂದಿನ ಮಾತುಕತೆ ಇಲ್ಲ ಎಂದು ಹೇಳಿದೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಕೇಂದ್ರ ಸರ್ಕಾರ ಒಪ್ಪದೇ ಇದ್ದರೆ ಮಾತುಕತೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಜೆಪಿ ವಕ್ತಾರ ಅಶುತೋಷ್ ರಂಕಾ ಪೋಸ್ಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ಪ್ರತಿಭಟನಾ ನಿರತರ ನಡುವೆ ಇಂದು ಮೂರನೇ ಹಂತದ ಸಭೆ ದೆಹಲಿಯಲ್ಲಿ ನಡೆಯಬೇಕಿತ್ತು.


