ಬೆಂಗಳೂರು: ಬೀದಿ ನಾಯಿಗಳ ಹಾವಳಿ-ದಾಳಿ ತಡೆಯಲು, ಪ್ರಾಣಿಗಳ ಜನನ ನಿಯಂತ್ರಣ ಕಾಯ್ದೆಯ ಅನುಷ್ಠಾನಕ್ಕೆ ತರಲು ಹೈಕೋರ್ಟ್ ಕೆಲವು ನಿರ್ದೇಶನಗಳನ್ನು ಸೂಚಿಸಿದ್ದು, ಬೀದಿ ನಾಯಿಗಳ ದಾಳಿಯಿಂದ ನಾಗರಿಕರು ಗಾಯಗೊಂಡರೆ ಅಥವಾ ಸಾವಿಗೀಡಾದರೆ ಆಯಾ ಸ್ಥಳೀಯ ಆಡಳಿತ ಸಂಸ್ಥೆಗಳೇ ಹೊಣೆ ಎಂದು ಹೈಕೋರ್ಟ್ ಆದೇಶಿಸಿದೆ.
ಬೆಳಗಾವಿ ಜಿಲ್ಲೆಯ ಎರಡು ವರ್ಷದ ಮಗ ಅಬ್ಬಸಾಲಿ ಯೂಸಫ್ ಸನದಿ 2018ರ ನ.29ರಂದು ಮನೆ ಹಿತ್ತಲಿನಲ್ಲಿ ಬಹಿರ್ದೆಸೆಗೆ ಹೋಗಿದ್ದಾಗ, ನಾಲ್ಕೈದು ನಾಯಿಗಳು ಏಕ ಕಾಲದಲ್ಲಿ ಮಗುವಿನ ಮೇಲೆ ದಾಳಿ ನಡೆಸಿ ಪಕ್ಕದ ಕೃಷಿ ಜಮೀನಿಗೆ ಎಳೆದೊಯಿದ್ದವು.
ಮಗುವಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿತ್ತು. ಸ್ಥಳೀಯ ಆಡಳಿತ ಪರಿಹಾರ ಘೋಷಿಸಿದ್ದು, ಅದು ಮೃತ ಬಾಲಕನ ತಂದೆಗೆ ದೊರೆಯದ ಕಾರಣ ಅವರು ಮತ್ತೆ ಹೈಕೋರ್ಟಿನಲ್ಲಿ ತಕರಾರು ಅರ್ಜಿ ಸಲ್ಲಿಸಿ 25 ಲಕ್ಷ ರೂ. ಪರಿಹಾರ ನೀಡುವಂತೆ ಕೋರಿದ್ದರು. ಹೈಕೋರ್ಟ್ನ ಧಾರವಾಡ ಪೀಠದಲ್ಲಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮೃತ ಬಾಲಕನ ತಂದೆಗೆ 10 ಲಕ್ಷ ರೂ. ಪರಿಹಾರ ಪಾವತಿಸಬೇಕು, ಕೋರ್ಟ್ ವ್ಯಾಜ್ಯದ ವೆಚ್ಚವಾಗಿ 20 ಸಾವಿರ ರೂ. ನೀಡಬೇಕು ಎಂದು ಬೆಳಗಾವಿ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ.
ನಾಗರಿಕರನ್ನು ರಕ್ಷಿಸುವ ಕರ್ತವ್ಯ ಕೂಡಾ ಸ್ಥಳೀಯ ಆಡಳಿತದ್ದೆ ಆಗಿರುತ್ತದೆ ಎಂದು ತಿಳಿಸಿರುವ ಹೈಕೋರ್ಟ್, ಈ ರೀತಿಯ ಕೆಲವು ನಿರ್ದೇಶನಗಳನ್ನು ನೀಡಿದೆ:
*ಬೀದಿ ನಾಯಿಗಳಿಗೆ ಸಂತಾನ ಹರಣ ಮತ್ತು ವ್ಯಾಕ್ಸಿನೇಷನ್ ಅನ್ನು ಪ್ರಾಣಿ ಕಲ್ಯಾಣ ಸಂಸ್ಥೆಗಳು ಮತ್ತು ಮೇಲ್ವಿಚಾರಣಾ ಸಮಿತಿ ಖಾತರಿಪಡಿಸಬೇಕು.
*ಪ್ರಾಣಿಗಳ ಜನನ ನಿಯಂತ್ರಣ ಕಾಯ್ದೆಯಡಿ ವಾಸಿಯಾಗದ ಕಾಯಿಲೆ ಅಥವಾ ಮಾರಣಾಂತಿಕ ಗಾಯಗಳಿಂದ ನರಳುತ್ತಿರುವ ಬೀದಿ ನಾಯಿಗಳಿಗೆ ತಜ್ಞ ಪಶು ವೈದ್ಯರಿಂದ ದಯಾ ಮರಣ ಕಲ್ಪಿಸಬೇಕು.
*ಆಕ್ರಮಣಕಾರಿ ನಾಯಿಗಳು ಮತ್ತು ರೇಬಿಸ್ ರೋಗದಿಂದ ನರಳುತ್ತಿರುವ ನಾಯಿಗಳ ಕುರಿತು ದೂರುಗಳು ಬಂದರೆ ಸ್ಥಳೀಯ ಪೌರಾಡಳಿತ ಸಂಸ್ಥೆಗಳ ಶ್ವಾನ ದಳವು ಪರಿಶೀಲಿಸಬೇಕು. ನಾಯಿಗೆ ರೇಬಿಸ್ ಇದ್ದರೆ ಸಹಜ ಸಾವು ಬರುವವರೆಗೂ ಅದನ್ನು ಐಸೋಲೇಷನ್ ನಲ್ಲಿ ಇಡಬೇಕು.
*ಬೀದಿ ನಾಯಿಗಳ ಕುರಿತು ನಾಗರಿಕರು ದೂರು ಸಲ್ಲಿಸಲು ದೂರು ಘಟಕ ಸ್ಥಾಪಿಸಬೇಕು. ನಾಯಿ ದಾಳಿಗೆ ತುತ್ತಾದವರಿಗೆ ಪರಿಹಾರ ಕಲ್ಪಿಸಲು ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸೂಕ್ತ ಮಾರ್ಗಸೂಚಿ ರಚಿಸಬೇಕು.


